ADVERTISEMENT

‘ನಂದಿನಿ’ ಪ್ರತ್ಯೇಕ ಅಸ್ತಿತ್ವ ಕಾಯ್ದುಕೊಳ್ಳಲಿದೆ: ಸಿ.ಎಂ ಬಸವರಾಜ ಬೊಮ್ಮಾಯಿ

ವಿಲೀನ ಅಲ್ಲ, ಒಟ್ಟಿಗೆ ಕೆಲಸ ಮಾಡಿದರೆ ಲಾಭ ಎಂದು ಶಾ ಹೇಳಿದ್ದಾರೆ: ಸಮರ್ಥನೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2023, 20:17 IST
Last Updated 1 ಜನವರಿ 2023, 20:17 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಕರ್ನಾಟಕ ಹಾಲು ಮಹಾಮಂಡಳವನ್ನು (ಕೆಎಂಎಫ್‌–ನಂದಿನಿ) ಗುಜರಾತ್‌ನ ಅಮುಲ್ ಜೊತೆ ವಿಲೀನ ಮಾಡು
ತ್ತಾರೆ ಎನ್ನುವುದು ತಪ್ಪು ಕಲ್ಪನೆ. ಊಹೆ ಮಾಡಿ ಯಾರೂ ಟೀಕೆ ಮಾಡಬಾರದು. ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸ್ಪಷ್ಟಪಡಿಸಿದರು.

ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ವಿಷಯದಲ್ಲಿ ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಮಾತನಾಡಿರುವುದು ಸ್ಪಷ್ಟವಾಗಿದೆ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ' ಎಂದರು.

‘ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ ಮತ್ತು ಮಾರುಕಟ್ಟೆ
ಯಲ್ಲಿ ಪರಸ್ಪರ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು ಎಂದು ಶಾ ಹೇಳಿದ್ದಾರೆ. ಅದರರ್ಥ ವಿಲೀನಗೊಳಿಸುವುದು ಎಂದಲ್ಲ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಒಟ್ಟಾಗಿ ಕೆಲಸ ಮಾಡಿದರೆ ಲಾಭ: ‘ನಂದಿನಿ ಮತ್ತು ಅಮುಲ್ ಕೆಲ ವಲಯಗಳಲ್ಲಿ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ಇವುಗಳು ತಾಂತ್ರಿಕತೆಯನ್ನು ವಿನಿಮಯ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಶಾ ಹೇಳಿದ್ದಾರೆ. ಅದಕ್ಕೆ ತಪ್ಪು ಅರ್ಥ ಕಲ್ಪಿಸುವ ಅಥವಾ ಈ ವಿಷಯದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.