ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ವಜಾಗೊಳಿಸಲು ಬಿಎಸ್ವೈಗೆ ಸೂಚಿಸಬೇಕೆಂದು ಡಿ.ಕೆ.ಶಿವಕುಮಾರ್ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಟ್ಯಾಗ್ ಮಾಡಿ, ವಿಡಿಯೊ ತುಣುಕೊಂದನ್ನು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, 'ಕೋಮು ಸೌಹಾರ್ದಕ್ಕೆ ದಕ್ಕೆ ತರುವ ಉದ್ದೇಶದಿಂದ ಪ್ರಚೋದನಾಕಾರಿ ಹೇಳಿಕೆಗಳನ್ನು ಸಚಿವ ಈಶ್ವರಪ್ಪ ನೀಡಿದ್ದಾರೆ. ಅವರನ್ನು ವಜಾಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚಿಸಬೇಕೆಂದು ಪ್ರಧಾನಿ ಮೋದಿಯವರನ್ನು ನಾನು ಒತ್ತಾಯಿಸುತ್ತೇನೆ' ಎಂದಿದ್ದಾರೆ.
ನಾವು ಭಾರತದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ. ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಡಿಕೆಶಿ ಟ್ವೀಟ್ನಲ್ಲಿ ಒತ್ತಾಯಿಸಿದ್ದಾರೆ.
ಈಶ್ವರಪ್ಪ ನೀಡಿದ್ದ ಹೇಳಿಕೆ
ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳ ಗುಲಾಮತನ ಭಾಸವಾಗುತ್ತದೆ. ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲೂ ಆಗದ ಸ್ಥಿತಿ ಇದೆ. ಅಲ್ಲಿರುವ ಮಸೀದಿಗಳು ಅಂತಹ ಮನೋಸ್ಥಿತಿ ಬಿಂಬಿಸುತ್ತವೆ ಎಂದು ಈಶ್ವರಪ್ಪ ಬುಧವಾರ ಹೇಳಿದ್ದರು.
ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದು ತಿಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.