ಬೀದರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಜನವರಿ 9 ರಂದು ಬೀದರ್ಗೆ ಭೇಟಿ ನೀಡಲಿದ್ದಾರೆ.
ಮೋದಿ ಪ್ರವಾಸ ಕಾರ್ಯಕ್ರಮದ ಪ್ರಯುಕ್ತ ವಿಶೇಷ ರಕ್ಷಣಾ ದಳದ (ಎಸ್ಪಿಜಿ) ಅಧಿಕಾರಿಗಳು ಸೋಮವಾರ ನಗರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಬೀದರ್ ಜಿಲ್ಲೆಯಲ್ಲಿ ಪ್ರಧಾನಿಯವರ ಯಾವುದೇ ಕಾರ್ಯಕ್ರಮ ಇಲ್ಲದಿದ್ದರೂ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ ಹಾಗೂ ವಿವಿಧ ಇಲಾಖೆಯಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಪ್ರಧಾನಿಯವರು ದೆಹಲಿಯಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳುವ ಸಂದರ್ಭದಲ್ಲಿ ಬುಧವಾರ ಬೆಳಿಗ್ಗೆ 9.50 ಕ್ಕೆ ವಿಶೇಷ ವಿಮಾನದ ಮೂಲಕ ವಾಯುಪಡೆ ತರಬೇತಿ ಕೇಂದ್ರದ ವಿಮಾನ ನಿಲ್ದಾಣಕ್ಕೆ ಬಂದು ಕೆಲಹೊತ್ತು ವಿಶ್ರಾಂತಿ ಪಡೆದು ಇಲ್ಲಿಂದ ಸೋಲಾಪುರಕ್ಕೆ ತೆರಳಲಿದ್ದಾರೆ.
ಬೀದರ್ನಲ್ಲಿ ಪ್ರಧಾನಿಯವರ ಯಾವುದೇ ಕಾರ್ಯಕ್ರಮ ಇಲ್ಲ. ಸೋಲಾಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಲೋಕಸಭಾ ಚುನಾವಣೆಯ ಪ್ರಯುಕ್ತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಅವರು ಮಹಾರಾಷ್ಟ್ರಕ್ಕೆ ನಾಲ್ಕನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.