ADVERTISEMENT

10 ದಿನಗಳಲ್ಲಿ ಸಿದ್ಧಗೊಂಡ ಕರ್ನಾಟಕದ ಸ್ತಬ್ಧಚಿತ್ರ ‘ನಾರಿ ಶಕ್ತಿ’

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 18:30 IST
Last Updated 24 ಜನವರಿ 2023, 18:30 IST
ನಾರಿ ಶಕ್ತಿ ಸ್ತಬ್ಧಚಿತ್ರ
ನಾರಿ ಶಕ್ತಿ ಸ್ತಬ್ಧಚಿತ್ರ   

ನವದೆಹಲಿ: ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಪರವಾಗಿ ಪಾಲ್ಗೊಳ್ಳಲಿರುವ ‘ನಾರಿ ಶಕ್ತಿ ಸ್ತಬ್ಧಚಿತ್ರವು 10 ದಿನಗಳಲ್ಲಿ ಸಂಪೂರ್ಣವಾಗಿ ಸಿದ್ಧಗೊಂಡಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಪಿ.ಎಸ್‌. ಹರ್ಷ ತಿಳಿಸಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರವು ಜನವರಿ 26ರಂದು ರಾಜಧಾನಿಯ ಕರ್ತವ್ಯ ಪಥದಲ್ಲಿ ಸಾಗುವುದರೊಂದಿಗೆ ಕರ್ನಾಟಕದ ಹಿರಿಮೆಯ ಕೀರ್ತಿ ಪತಾಕೆಯನ್ನು ಹಾರಿಸಲಿದೆ. ಇದರೊಂದಿಗೆ ಸತತವಾಗಿ 14 ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ’ ಎಂದರು.

'ಆಜಾದಿ ಕ ಅಮೃತ ಮಹೋತ್ಸವದ ಅಂಗವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರ ಸಾಧನೆಗಳನ್ನು 'ನಾರಿ ಶಕ್ತಿ' ಹೆಸರಿನಲ್ಲಿ ಬಿಂಬಿಸಲಾಗುತ್ತದೆ ಎಂದರು.

ADVERTISEMENT

ಸ್ತಬ್ಥಚಿತ್ರದಲ್ಲಿ ಏನಿರಲಿದೆ: ಗಿಡ-ಮರ, ಬೆಟ್ಟ-ಗುಡ್ಡ, ಪಕ್ಷಿಗಳಿಂದ ಕಂಗೊಳಿಸುತ್ತಿರುವ ಸ್ತಬ್ಧಚಿತ್ರದ ಮುಂಭಾಗದಲ್ಲಿ ತೊಟ್ಟಿಲು ತೂಗುತ್ತಾ, ಕೈನಲ್ಲಿ ಮಗು ಆಡಿಸುತ್ತಿರುವ ಸೂಲಗಿತ್ತಿ ನರಸಮ್ಮ ಅವರನ್ನು ತೋರಿಸಲಾಗಿದೆ. ಹಚ್ಚ ಹಸುರಿನಿಂದ ಕೂಡಿರುವ ಸ್ತಬ್ಧಚಿತ್ರದ ಮಧ್ಯಭಾಗದಲ್ಲಿ ಗಿಡ ಮರಗಳನ್ನು ಪೋಷಿಸುತ್ತಿರುವ ತುಳಸಿ ಗೌಡ ಹಾಲಕ್ಕಿ ಅವರನ್ನು ತೋರಿಸಲಾಗಿದೆ. ಕಣ್ಣಿಗೆ ಮುದ ನೀಡುವ ಕಾಡಿನ ನಿಜಸ್ವರೂಪದಂತಿರುವ ಸ್ತಬ್ಧಚಿತ್ರದ ಕೊನೆಯ ಭಾಗದಲ್ಲಿ ರಾಜ್ಯ ಹೆದ್ದಾರಿಯ ಆಜುಬಾಜಿನಲ್ಲಿ 8000 ಮರಗಳನ್ನು ನೆಟ್ಟು ನೀರೆರೆದು ಬೆಳೆಸಿದ ಸಾಲುಮರದ ತಿಮ್ಮಕ್ಕ ಪ್ರತಿಕೃತಿ ಇದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.