ಬೆಂಗಳೂರು: ವಿಧಾನಪರಿಷತ್ ಸಭಾಪತಿ ಆಯ್ಕೆಗೆ ಮಂಗಳವಾರ (ಫೆ. 9) ಚುನಾವಣೆ ನಡೆಯಲಿದ್ದು, ನಸೀರ್ ಅಹ್ಮದ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ.
ಸಭಾಪತಿಯಾಗಿದ್ದ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸೋಮವಾರ (ಫೆ. 8) ಬೆಳಿಗ್ಗೆ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು.
ಬಹುತೇಕ ಸಂದರ್ಭಗಳಲ್ಲಿ ಸಭಾಪತಿ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡುವುದು ಸಂಪ್ರದಾಯ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪ್ರತಾಪಚಂದ್ರಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡರೆ, ಎಸ್.ಎಲ್. ಧರ್ಮೇಗೌಡ ಅವರನ್ನು ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಆಯ್ಕೆ ಮಾಡಿತ್ತು.
ಈ ಮಧ್ಯೆ, ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ತೆರವಾದ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಬಿಜೆಪಿಯ ಎಂ.ಕೆ. ಪ್ರಾಣೇಶ್ ಆಯ್ಕೆಯಾಗಿದ್ದರು. ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲದಲ್ಲಿ ಜೆಡಿಎಸ್ನ ಬಸವರಾಜ ಹೊರಟ್ಟಿ ಆಯ್ಕೆ ಖಚಿತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.