ADVERTISEMENT

ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ದೇಶವ್ಯಾಪಿ ಮುಷ್ಕರ: ರಾಜ್ಯದಲ್ಲೂ ಬೆಂಬಲ

ಬೆಂಗಳೂರಿನಲ್ಲಿ ಬ್ಯಾಂಕ್ ನೌಕರರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 1:10 IST
Last Updated 28 ಮಾರ್ಚ್ 2022, 1:10 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳ ಒಕ್ಕೂಟವುಕೇಂದ್ರ ಸರ್ಕಾರದ ಕಾರ್ಮಿಕ–ರೈತ ವಿರೋಧಿ ಧೋರಣೆ ಖಂಡಿಸಿ ಮಾರ್ಚ್ 28 ಹಾಗೂ 29ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದಲ್ಲೂ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಇದರಿಂದಾಗಿ ಸೋಮವಾರ ಹಾಗೂ ಮಂಗಳವಾರ ಕೇಂದ್ರ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಗ್ರಾಮೀಣ ಪ್ರದೇಶ, ತಾಲ್ಲೂಕು ಮಟ್ಟ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆಗಳು ನಡೆಯಲಿವೆ. ಬ್ಯಾಂಕ್, ವಿಮೆ, ಆದಾಯ ತೆರಿಗೆ,ಅಂಚೆ ಸೇರಿ ಹಲವು ಸೇವೆಗಳಲ್ಲಿ ಎರಡೂ ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ. ಆಸ್ಪತ್ರೆ, ವೈದ್ಯಕೀಯ, ಹೋಟೆಲ್, ಸಾರಿಗೆ, ಆಟೊ, ಕ್ಯಾಬ್ ಸೇರಿದಂತೆ ಅಗತ್ಯ ಸೇವೆಗಳಲ್ಲಿ ಹಾಗೂತರಕಾರಿ ಮತ್ತಿತರ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಷ್ಕರಕ್ಕೆ ಬೆಂಬಲ ನೀಡಿದೆ. ಇದು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳ ಸಂಚಾರದ ಮೇಲೆ ಪರಿಣಾಮ ಬೀರುವುದಿಲ್ಲ. ಧರಣಿಯನ್ನಷ್ಟೇ ನಡೆಸುವುದಾಗಿ ಕಾರ್ಮಿಕರು ತಿಳಿಸಿದ್ದಾರೆ.

ADVERTISEMENT

ಬ್ಯಾಂಕ್ ನೌಕರರ ಪ್ರತಿಭಟನೆ: ‘ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತ ಹಾಗೂ ಕೆನರಾ ಬ್ಯಾಂಕ್ ಮುಖ್ಯ ಕಚೇರಿ ಎದುರು ಸೋಮವಾರ ಬೆಳಿಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕೆನರಾ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ. ರಾಧಾಕೃಷ್ಣ ‘ಪ್ರಜಾವಾಣಿ’ಗೆ ತಿಳಿಸಿದರು.

ಕಾಂಗ್ರೆಸ್ ಭವನ ಎದುರು ಪ್ರತಿಭಟನೆ: ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸಂಘಟನೆ ವತಿಯಿಂದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಎದುರು ಬೆಳಿಗ್ಗೆ 11 ಕ್ಕೆ ಪ್ರತಿಭಟನೆ ನಡೆಯಲಿದೆ.

ಭಾರಿ ಪ್ರತಿಭಟನೆ ನಾಳೆ

ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ರಾಜ್ಯದ ಸಂಘಟನೆಗಳು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 29ರಂದು ಭಾರಿ ಪ್ರತಿಭಟನೆ ಹಮ್ಮಿಕೊಂಡಿವೆ. ಉದ್ಯಾನದಲ್ಲೇ ಬಹಿರಂಗ ಸಭೆಯನ್ನೂ ಆಯೋಜಿಸಲಾಗಿದೆ.

ಮುಷ್ಕರಕ್ಕೆ ಬೆಂಬಲ ನೀಡಿದ ಪ್ರಮುಖ ಸಂಘಟನೆಗಳು:

ಅಖಿಲ ಭಾರತ ಕಾರ್ಮಿಕ ಒಕ್ಕೂಟ ಕಾಂಗ್ರೆಸ್ (ಎಐಟಿಯುಸಿ), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು), ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ), ಟ್ರೇಡ್ ಯೂನಿಯನ್ ಕೋ–ಆರ್ಡಿನೇಷನ್ ಸೆಂಟರ್ (ಟಿಯುಸಿಸಿ), ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎಐಸಿಸಿಟಿಯು), ಗಾರ್ಮೆಂಟ್ಸ್ ಮತ್ತು ಟೆಕ್ಸ್‌ಟೈಲ್ಸ್ ವರ್ಕರ್ಸ್ ಯೂನಿಯನ್ (ಜಿಎಟಿಡಬ್ಲ್ಯುಯು), ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ (ಐಎನ್‌ಟಿಯುಸಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.