ಬೆಂಗಳೂರು: ಕೇಂದ್ರ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಸಹಯೋಗದಲ್ಲಿ 15ನೇ ರಾಷ್ಟ್ರೀಯ ಬುಡಕಟ್ಟು ಯುವಜನ ವಿನಿಮಯ ಕಾರ್ಯಕ್ರಮ ಡಿ.5 ರಿಂದ 31ರವರೆಗೆ ಮೈಸೂರು, ಬೆಂಗಳೂರು ಮತ್ತು ಕೊಡುಗು ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ದಕ್ಷಿಣ ರಾಜ್ಯಗಳ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಾದ್ಯಂತವಿರುವ ವಿವಿಧ ಸಂಸ್ಕೃತಿ, ಕಲೆ, ಆಹಾರ ಪದ್ಧತಿಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಚಯಿಸುವುದು ಯುವ ವಿನಿಮಯ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
‘ಡಿ.5 ರಿಂದ 11ರವರೆಗೆ ಮೈಸೂರಿನ ಮಾನಸ ಗಂಗೋತ್ರಿ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಛತ್ತೀಸ್ಗಡ, ಜಾರ್ಖಂಡ್, ಒಡಿಶಾ ಮತ್ತು ಬಿಹಾರ ರಾಜ್ಯಗಳ ಬುಡಕಟ್ಟು ಸಮುದಾಯದ 220 ಯುವಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
‘ಡಿ. 15ರಿಂದ 21ರವರೆಗೆ ಬೆಂಗಳೂರಿನ ಯುವನಿಕಾ ಸಭಾಂಗಣದಲ್ಲಿ ನಡೆಯುವ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದಲ್ಲಿ ಜಾರ್ಖಂಡ್, ಒಡಿಶಾ ರಾಜ್ಯಗಳ 220ಕ್ಕೂ ಯುವಜನರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್, ಸಚಿವ ಬಿ. ನಾಗೇಂದ್ರ ಭಾಗವಹಿಸಲಿದ್ದಾರೆ’ ಎಂದರು.
‘ಡಿ. 26ರಿಂದ 31ರವರೆಗೆ ಕೊಡಗು ಜಿಲ್ಲೆಯಲ್ಲಿ ಗೋಣಿಕೊಪ್ಪದ ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮ ನಡೆಯಲಿದ್ದು, ಕಾಶ್ಮೀರದ 120 ಯುವಜನರು ಭಾಗವಹಿಸಲಿದ್ದಾರೆ. ಕೊಡಗಿನ ಕಲೆ, ಸಂಸ್ಕೃತಿ, ಆಚಾರ–ವಿಚಾರ, ಉಡುಗೆ–ತೊಡುಗೆ ಜೀವನಶೈಲಿಯ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ’ ಎಂದು ಅವರು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.