ADVERTISEMENT

ಕಾಂಗ್ರೆಸ್‌ನಿಂದ 'ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ'; ಜಾಗಟೆ ಬಾರಿಸಿ ಪ್ರತಿಭಟನೆ

ಅಡುಗೆ ಅನಿಲ ಸಿಲಿಂಡರ್‌ಗೆ ಹೂವಿನ ಹಾರ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 7:24 IST
Last Updated 31 ಮಾರ್ಚ್ 2022, 7:24 IST
   

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ವಿರುದ್ಧ ದೇಶಾದಾದ್ಯಂತ'ಬೆಲೆಯೇರಿಕೆ ಮುಕ್ತ ಭಾರತಅಭಿಯಾನ'ಹಮ್ಮಿಕೊಂಡಿದೆ. ಇದರಅಂಗವಾಗಿ ನಗರದಲ್ಲಿಯೂ ಗುರುವಾರ ಪ್ರತಿಭಟನೆ ನಡೆಯಿತು.

ಕೆಪಿಸಿಸಿ ಕಚೇರಿ ಮುಂದೆ ಅಡುಗೆ ಅನಿಲ ಸಿಲಿಂಡರ್‌ಗೆ ಹೂವಿನ ಹಾರ ಹಾಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.

ಸಿಲಿಂಡರ್ ಮತ್ತು ದ್ವಿಚಕ್ರ ವಾಹನಗಳಿಗೆ ಡಿ. ಕೆ. ಶಿವಕುಮಾರ್ ಪೂಜೆ ಸಲ್ಲಿಸಿದರೆ, ಸಿದ್ದರಾಮಯ್ಯ ಜಾಗಟೆ ಬಾರಿಸಿದರು.

ADVERTISEMENT

ಈ ವೇಳೆ ಮಾತನಾಡಿದ ಡಿ.ಕೆ‌. ಶಿವಕುಮಾರ್, 'ಬೆಲೆ ಏರಿಕೆ ಗಗನಕ್ಕೆ ಹೋಗಿದೆ.‌ ಆದಾಯ ಪಾತಾಳ ತಲುಪಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ಬೆಲೆ ಏರಿಕೆ ಮೂಲಕ ಪ್ರತಿದಿನಜನ ಸಾಮಾನ್ಯರ ಪಿಕ್ ಪಾಕೆಟ್ ಆಗುತ್ತಿದೆ.‌ ಹೀಗಾಗಿ ಗ್ಯಾಸ್ ಸಿಲಿಂಡರ್,ಬೈಕ್,ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ' ಎಂದರು.

'ಜನರ ನೋವನ್ನು ಬಿಜೆಪಿ ವಿರುದ್ಧ ಮತ ಹಾಕಿ, ಬಿಜೆಪಿ ಸರ್ಕಾರ ಕಿತ್ತೆಸೆಯುವ ಮೂಲಕ ಕಳೆಯಬೇಕು' ಎಂದ ಶಿವಕುಮಾರ್, 'ನೂರು ಬಾರಿ ಚಪ್ಪಲಿಯಲ್ಲಿ ಪಟ ಪಟ ಪಟ ಅಂತ ಹೊಡೆದರೂ ಸಹಿಸಬಹುದು. ಆದರೆ ದುಡ್ಡಿನ ಏಟು ತಿನ್ನಲು ಆಗಲ್ಲ' ಎಂದರು.

ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಭಾಗವಹಿಸಿದ್ದರು.

ಮನೆ ಮುಂದೆ ಪ್ರತಿಭಟನೆ: ಡಿ.ಕೆ. ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದ ಎದುರು ಅಡುಗೆ ಅನಿಲ ಸಿಲಿಂಡರ್ ಇಟ್ಟು ಹೂವಿನ ಹಾರ ಹಾಕಿ ಸಾಂಕೇತಿಕವಾಗಿ ಪ್ರತಿಭಟಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಎಲ್ಲೆಡೆ ಪ್ರತಿಭಟನೆನಡೆಸುವಂತೆ ಎಐಸಿಸಿ ಸೂಚನೆ ನೀಡಿತ್ತು. ಹೀಗಾಗಿ, ಶಿವಕುಮಾರ್ ಕೂಡಾ ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.