ಜಿ. ಪರಮೇಶ್ವರ, ಗೃಹ ಸಚಿವ
ಬೆಂಗಳೂರು: ‘ನಕ್ಸಲರು ಶರಣಾದಾಗ ಶಸ್ತ್ರಾಸ್ತ್ರಗಳು ಇರಲಿಲ್ಲ. ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ. ಎಲ್ಲಿ ಎಸೆದು ಬಂದಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗಿರುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.
‘ನಕ್ಸಲ್ ಚಟುವಟಿಕೆಗೆ ಬರಬಾರದು ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು. ನಕ್ಸಲರ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ಅದರಲ್ಲಿ ತಪ್ಪೇನಿದೆ. ಬಿಜೆಪಿ ಶಾಸಕ ಸುನಿಲ್ ಕುಮಾರ್ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಜಾಸ್ತಿ ಇದೆ. ಎಎನ್ಎಫ್ ಕಾರ್ಕಳದಲ್ಲಿ ಇದೆಯಲ್ಲವೇ’ ಎಂದರು.
‘ಆರು ನಕ್ಸಲರ ಶರಣಾಗತಿಯಿಂದ ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ 99ರಷ್ಟು ಕೊನೆಯಾಗಿದೆ. ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರಿದ್ದು, ಪ್ರಕರಣಗಳಿವೆ. ಆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಮ್ಮ ಮುಖ್ಯಮಂತ್ರಿ ಮಾತನಾಡುವುದಾಗಿ ಹೇಳಿದ್ದಾರೆ’ ಎಂದರು.
‘ಒಳ್ಳೆಯ ಸಂದೇಶ ರವಾನೆ’: ‘ಆರು ಮಂದಿ ನಕ್ಸಲರು ಶರಣಾಗಿ, ಸಮಾಜದ ಮುಖ್ಯವಾಹಿನಿಗೆ ಹಿಂದಿರುಗಿ ಬಂದಿರುವುದರಿಂದ ಒಳ್ಳೆಯ ಸಂದೇಶ ರವಾನೆ ಆಗಿದೆ’ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಶರಣಾದವರಿಗೆ ಪರಿಹಾರ ಪ್ಯಾಕೇಜ್ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರ್ಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಆಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.