ಬೆಂಗಳೂರು: ರಾಜ್ಯ ಸರ್ಕಾರದ ಕಾನೂನು ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಎನ್.ಸಿ. ಶ್ರೀನಿವಾಸ ಅವರು ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ ಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಶ್ರೀನಿವಾಸ ಅವರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ಇದೇ ಸಂದರ್ಭದಲ್ಲಿ ಎಸ್.ಎಂ. ಸೋಮಶೇಖರ ಮತ್ತು ಕೆ.ಪಿ ಮಂಜುನಾಥ ಅವರು ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮೂರೂ ಗಣ್ಯರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ಶ್ರೀನಿವಾಸ ಮತ್ತು ಸೋಮಶೇಖರ ಅವರು ಆಂಗ್ಲ ಭಾಷೆಯಲ್ಲಿ ಹಾಗೂ ಮಂಜುನಾಥ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಮುನ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಅವರು ಮೂರೂ ಗಣ್ಯರ ನೇಮಕಾತಿ ಅಧಿಸೂಚನೆಯನ್ನು ವಾಚಿಸಿದರು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ. ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಲೋಕೋಪಯೋಗಿ ಸಚಿವರ ಸಂಸದೀಯ ಕಾರ್ಯದರ್ಶಿ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಶಾಸಕ ಸಿ.ಎನ್. ಬಾಲಕೃಷ್ಣ, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಕರ್ನಾಟಕ ಉಚ್ಛ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶ ಎಲ್. ನಾರಾಯಣಸ್ವಾಮಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ. ಎಂ. ವಿಜಯ್ ಶಂಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.