ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದ ಭಯೋತ್ಪಾದಕನನ್ನು ಕಾಶ್ಮೀರ ಪೊಲೀಸರು ಸೋಮವಾರ ಬಂಧಿಸಿದ್ದು, ಪ್ರಕರಣದ ತನಿಖೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, 'ಭಟ್ಕಳ, ಶಿರಸಿ ಸೇರಿದಂತೆ ರಾಜ್ಯದ ವಿವಿಧೆಡೆ ಹಿಂದೆಯೂ ಭಯೋತ್ಪಾದಕರನ್ನು ಬಂಧಿಸಲಾಗಿತ್ತು. ಈಗ ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ತನಿಖೆಯಲ್ಲಿ ಕಾಶ್ಮೀರ ಪೊಲೀಸರಿಗೆ ಎಲ್ಲ ರೀತಿಯ ನೆರವು ಒದಗಿಸಲು ಸರ್ಕಾರ ಸಿದ್ಧ' ಎಂದರು.
ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ 2-ಎ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸುವುದಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಅವರು ನಮ್ಮ ಸ್ವಾಮೀಜಿ. ನಮ್ಮ ಮನೆ, ಅವರ ಮನೆಯೂ ಹೌದು. ಅವರೊಂದಿಗೆ ಮಾತನಾಡುವೆ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.