ADVERTISEMENT

ನೇಕಾರರ ಅಭಿವೃದ್ಧಿ ನಿಗಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 17:43 IST
Last Updated 17 ಜನವರಿ 2021, 17:43 IST
ಕಾರ್ಯಕ್ರಮದಲ್ಲಿ ನೇಕಾರ ಸಮುದಾಯಗಳ ಒಕ್ಕೂಟದಿಂದ ರಾಜ್ಯಸಭಾ ಸದಸ್ಯ ಕೆ.ನಾರಾಯಣ್‌ ಅವರನ್ನು ಸನ್ಮಾನಿಸಲಾಯಿತು. ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ದಿವ್ಯ ಜ್ಞಾನನಂದಗಿರಿ ಸ್ವಾಮೀಜಿ, ನಾಲ್ವಡಿ ನೀಲಕಂಠ ಪಟ್ಟದಾರ್ಯ ಸ್ವಾಮೀಜಿ, ಎಂ.ಡಿ.ಲಕ್ಷ್ಮೀನಾರಾಯಣ, ಕೆ.ಸಿ.ಕೊಂಡಯ್ಯ ಹಾಗೂ ಮುಖಂಡರು ಇದ್ದಾರೆ –ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ ನೇಕಾರ ಸಮುದಾಯಗಳ ಒಕ್ಕೂಟದಿಂದ ರಾಜ್ಯಸಭಾ ಸದಸ್ಯ ಕೆ.ನಾರಾಯಣ್‌ ಅವರನ್ನು ಸನ್ಮಾನಿಸಲಾಯಿತು. ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ದಿವ್ಯ ಜ್ಞಾನನಂದಗಿರಿ ಸ್ವಾಮೀಜಿ, ನಾಲ್ವಡಿ ನೀಲಕಂಠ ಪಟ್ಟದಾರ್ಯ ಸ್ವಾಮೀಜಿ, ಎಂ.ಡಿ.ಲಕ್ಷ್ಮೀನಾರಾಯಣ, ಕೆ.ಸಿ.ಕೊಂಡಯ್ಯ ಹಾಗೂ ಮುಖಂಡರು ಇದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ನೇಕಾರ ಸಮುದಾಯಗಳ ಬಹುಕಾಲದ ಬೇಡಿಕೆಯಾಗಿರುವ ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ‌ಸಮುದಾಯದ ಮುಖಂಡರನ್ನೊಳಗೊಂಡ ನಿಯೋಗವನ್ನು ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಿಗೆ ಕರೆದೊಯ್ಯಲಾಗುವುದು’ ಎಂದುರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ ತಿಳಿಸಿದರು.

ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಸಭಾ ಸದಸ್ಯ ಕೆ.ನಾರಾಯಣ್ ಅವರ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವಂತೆಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಈವರೆಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ವೀರಶೈವ, ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ನೇಕಾರ ಸಮುದಾಯಕ್ಕೂ ನಿಗಮದ ಅಗತ್ಯ ಇರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಒತ್ತಾಯಿಸಿದರು.

ADVERTISEMENT

ಒಕ್ಕೂಟದ ಗೌರವಾಧ್ಯಕ್ಷ ಕೆ.ಸಿ.ಕೊಂಡಯ್ಯ, ‘ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ₹150 ಕೋಟಿಗೂ ಹೆಚ್ಚು ಹಣ ವ್ಯಯ ಮಾಡಿ ‘ಜಾತಿಗಣತಿ ವರದಿ’ ಸಿದ್ಧಪಡಿಸಿದ್ದರು. ಆ ವರದಿಯನ್ನು ಈಗಿನ ಸರ್ಕಾರ ಕೂಡಲೇ ಸ್ವೀಕರಿಸಬೇಕು’ ಎಂದು ಒತ್ತಾಯಿಸಿದರು.

ಗುಳೇದಗುಡ್ಡದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ,‘ನೇಕಾರರನ್ನು ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಸ್ಥಾಪನೆಗೊಂಡಿರುವ ನೇಕಾರ ಸಮುದಾಯಗಳ ಒಕ್ಕೂಟವು ಸಂಘಟನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ರಾಜ್ಯಸಭಾ ಸದಸ್ಯ ಕೆ.ನಾರಾಯಣ್,‘ಸಮಾಜದಿಂದ ಪಡೆಯುವ ಯಾವುದೇ ಲಾಭದಲ್ಲಿ ಒಂದಿಷ್ಟು ಹಣವನ್ನು ಸಮಾಜದ ಅಭಿವೃದ್ಧಿಗಾಗಿ ನೀಡುವುದು ಮನುಷ್ಯ ಧರ್ಮ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.