ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ–2020ರ ಅನುಷ್ಠಾನಕ್ಕೆ ಹೊರಡಿಸಿರುವ ಆದೇಶವನ್ನು ಹಿಂಪಡೆಯದೇ ಇದ್ದರೆ ಹೊಸ ನೀತಿಯ ಕುರಿತು ವಿಧಾನಸಭೆಯಲ್ಲಿ ನಡೆಸುವ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿದ್ದಾರೆ.
‘ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು ಮತ್ತು ಪೋಷಕರ ಜತೆ ಯಾವುದೇ ರೀತಿಯ ಚರ್ಚೆ ನಡೆಸದೆ ಶಿಕ್ಷಣ ನೀತಿ ಅನುಷ್ಠಾನಕ್ಕೆ ಚಾಲನೆ ನೀಡಲಾಗಿದೆ. ಚಾಲನೆ ಕೊಟ್ಟ ಬಳಿಕ, ಚರ್ಚೆ ಮಾಡಬೇಕು ಎಂದು ಕೋರುವುದು ಸಂಸದೀಯವಾಗಿ ಸರಿಯಲ್ಲ. ನಿಜವಾಗಿಯೂ ಚರ್ಚೆ ಮಾಡಬೇಕು ಎಂಬುದು ನಿಮ್ಮ ಬಯಕೆಯಾಗಿದ್ದರೆ ಶಿಕ್ಷಣ ನೀತಿ ಅನುಷ್ಠಾನಕ್ಕೆ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು’ ಎಂದು ಶುಕ್ರವಾರ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.
‘ಹೊಸ ಶಿಕ್ಷಣ ನೀತಿ ಆರೋಗ್ಯಕರವಾಗಿದೆ ಮತ್ತು ಈ ಶತಮಾನಕ್ಕೆ ಅಗತ್ಯವಾಗಿದೆ ಎಂದು ಮನವರಿಕೆಯಾದರೆ ಅನುಷ್ಠಾನಕ್ಕೆ ನಾವೇ ಬೆಂಬಲಿಸುತ್ತೇವೆ. ಇಲ್ಲವಾದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂತಹ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತಾಪವನ್ನು ನಾವು ಹೊರಬೇಕಾಗುತ್ತದೆ’ ಎಂದು ಉಲ್ಲೇಖಿಸಿದ್ದಾರೆ.
ಹೊಸ ಶಿಕ್ಷಣ ನೀತಿಯಲ್ಲಿ ಹಲವು ಲೋಪಗಳಿದ್ದು, ಕೋಮುವಾದಿ ಕಾರ್ಯಸೂಚಿ ಹೊಂದಿದೆ ಎಂಬ ಆತಂಕ ವ್ಯಕ್ತವಾಗುತ್ತಿದೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಮತ್ತು ಶಿಕ್ಷಣದ ಖಾಸಗೀಕರಣಕ್ಕೆ ಒತ್ತುನೀಡುವ ಅಂಶಗಳಿವೆ ಎಂಬ ಆರೋಪವೂ ಇದೆ. ಈ ಕುರಿತು ಚರ್ಚೆ ನಡೆಯಬೇಕಿತ್ತು. ಆದರೆ, ಅದನ್ನು ಈವರೆಗೂ ಮಾಡಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.