
ಡಿಕೆಶಿ
ಬೆಳಗಾವಿ (ಸುವರ್ಣಸೌಧ): ‘ಮಂಗಳೂರಿನಲ್ಲಿ ಇತ್ತೀಚೆಗೆ ಕೀಟ (ಬ್ಲ್ಯಾಕ್ ಸೋಲ್ಜರ್ ಫ್ಲೈ) ಕಸವನ್ನು ತಿಂದು ಗೊಬ್ಬರ ಮಾಡುವ ಬಗ್ಗೆ ವರದಿಯಾಗಿದ್ದು, ಆ ಕುರಿತು ಸಮೀಕ್ಷೆ ನಡೆಸಿ ಕಸ ವಿಲೇವಾರಿಗೆ ಬೆಂಗಳೂರಿನಲ್ಲಿಯೂ ಅದನ್ನು ಬಳಸಿಕೊಳ್ಳಬಹುದೇ ಎಂಬ ಬಗ್ಗೆ ಯೋಚಿಸಲಾಗುತ್ತಿದೆ. ಜೊತೆಗೆ, ಇನ್ನೂ 2-3 ಪ್ರಯೋಗಗಳ ಬಗ್ಗೆಯೂ ಚಿಂತನೆ ನಡೆಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರದೇಶದ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗುಂದಲಹಳ್ಳಿ ಗ್ರಾಮದಲ್ಲಿ ಟೆರ್ರಾ ಫಾರ್ಮಾ ಬಯೋಟೆಕ್ನಾಲಜೀಸ್ ಲಿಮಿಟೆಡ್ ಸಂಸ್ಥೆ ಮತ್ತು ಇತರ ಹಿಡುವಳಿದಾರರಿಗೆ ಸೇರಿದ ಒಟ್ಟು 134 ಎಕರೆ 10 ಗುಂಟೆ ಪ್ರದೇಶದಲ್ಲಿ ವಿಲೇವಾರಿ ಮಾಡಲು ನಿರ್ಧರಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.
‘ಪರಿಸರ ಮಾಲಿನ್ಯದ ಕಾರಣಕ್ಕೆ ಟೆರ್ರಾ ಫಾರ್ಮಾ ಬಯೋಟೆಕ್ನಾಲಜೀಸ್ ಲಿಮಿಟೆಡ್ ಸಂಸ್ಥೆಯನ್ನು 2016ರಲ್ಲಿಯೇ ಮುಚ್ಚಲಾಗಿದೆ. ಅಲ್ಲಿ ಮತ್ತೆ ಕಸ ವಿಲೇವಾರಿ ಕಾರ್ಯ ಆರಂಭಿಸುವುದಕ್ಕೆ ಸ್ಥಳೀಯರ ತೀವ್ರ ವಿರೋಧವಿದೆ’ ಎಂದರು.
ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಬೆಂಗಳೂರು ನಗರದಲ್ಲಿ ತ್ಯಾಜ್ಯ ಉತ್ಪಾದನೆ ದಿನೇ ದಿನೇ ಹೆಚ್ಚಾಗುತ್ತಿದ್ದು, ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಸಮಗ್ರ ಘನತ್ಯಾಜ್ಯವನ್ನು ವೈಜ್ಞಾನಿಕ ಘಟಕದಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ’ ಎಂದರು.
‘ಬೆಂಗಳೂರು ನಗರದಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಟನ್ ಕಸ ಸಂಗ್ರಹವಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಎರಡು ದಿಕ್ಕುಗಳಲ್ಲಿ (ಉತ್ತರ ಮತ್ತು ದಕ್ಷಿಣ) ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಹಸಿ ತ್ಯಾಜ್ಯದ ಬಯೋ ಮಿಥಿನೇಷನ್ನಿಂದ ಅನಿಲ ಉತ್ಪಾದನೆ, ಗೊಬ್ಬರ ತಯಾರಿಕೆ, ಒಣತ್ಯಾಜ್ಯದ ಮರುಬಳಕೆ ಮತ್ತು ವಿದ್ಯುತ್ ಉತ್ಪಾದನೆ ಇತ್ಯಾದಿ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ’ ಎಂದರು.
‘ಅತ್ಯಂತ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುವ ಮೂಲಕ ಸ್ಥಳೀಯವಾಗಿ ಪರಿಸರದ ಮೇಲೆ ಮತ್ತು ಸಮಾಜದ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.