ADVERTISEMENT

ಅರಮನೆ ಮೈದಾನದಲ್ಲಿ ಹೊಸ ವರ್ಷಾಚರಣೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 2:25 IST
Last Updated 2 ಜನವರಿ 2020, 2:25 IST
ಬೆಂಗಳೂರು ಅರಮನೆ ಮೈದಾನ
ಬೆಂಗಳೂರು ಅರಮನೆ ಮೈದಾನ   

ಬೆಂಗಳೂರು: ಮುಂದಿನ ವರ್ಷದಿಂದ ಅರಮನೆ ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಬುಧವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ನಗರದ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಮಯದಲ್ಲಿ ಅಸಭ್ಯ ವರ್ತನೆಗಳು ಕಂಡುಬಂದಿವೆ. ಇದನ್ನು ಹೀಗೆ ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದರು.

ಮಂಗಳವಾರ ರಾತ್ರಿ ಪುಂಡರು ಅಸಭ್ಯ ವರ್ತನೆ ತೋರಿದ್ದಾರೆ. ಕೆಲವು ಯುವಕರಿಂದ ಕಿರುಕುಳವಾಗಿದೆ. ಕಿಡಿಕೇಡಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಹಿಂದಿನ ವರ್ಷವೂ ನಡೆದಿತ್ತು: ಹಿಂದಿನ ವರ್ಷದಲ್ಲೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಯರ ಜತೆ ಯುವಕರು ಅಸಭ್ಯವಾಗಿ ವರ್ತಿಸಿದ್ದು, ಈ ವಿಚಾರ ದೊಡ್ಡಮಟ್ಟದ ಗದ್ದಲಕ್ಕೆ ಕಾರಣವಾಗಿತ್ತು. ಇದು ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿತ್ತು. ಇನ್ನು ಮುಂದೆ ಇಂತಹ ಅಹಿತಕರ ಘಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದರು.

ಈ ವರ್ಷವೂ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಿ.ಸಿ ಟಿ.ವಿ.ಗಳನ್ನು ಅಳವಡಿಸಿ, ಭದ್ರತೆಗೆ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಇಷ್ಟೆಲ್ಲ ಭದ್ರತೆಯ ನಡುವೆಯೂ ಯುವತಿಯರ ಮೇಲೆ ಮತ್ತೆ ದೌರ್ಜನ್ಯಗಳು ನಡೆದಿವೆ.

ಕಠಿಣ ಕ್ರಮ: ಬೊಮ್ಮಾಯಿ
ಹೊಸ ವರ್ಷಾಚರಣೆ ಸಮಯದಲ್ಲಿ ಬ್ರಿಗೇಡ್ ರಸ್ತೆ, ಎಂ.ಜಿ.ರಸ್ತೆಯಲ್ಲಿ ಅನುಚಿತ ವರ್ತನೆ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೆಲವು ಕಡೆಗಳಲ್ಲಿ ಹುಡುಗರು ಪಾನಮತ್ತರಾಗಿ ಗದ್ದಲ ನಡೆಸಿರುವುದು ವರದಿಯಾಗಿದೆ. ಎಲ್ಲೆಲ್ಲಿ ಇಂತಹ ಘಟನೆಗಳು ನಡೆದಿವೆ ಎಂಬ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಕಮಿಷನರ್‌ಗೆ ಸೂಚಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.