ಮಂಡ್ಯ: ಜೆಡಿಎಸ್–ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಸುಮಲತಾ ಅವರಿಗಿಂತ ಹೆಚ್ಚು ಜನರನ್ನು ಸೇರಿಸುವ ಅನಿವಾರ್ಯದಲ್ಲಿರುವ ಜೆಡಿಎಸ್ ಮುಖಂಡರು, ನಿಖಿಲ್ ಮೆರವಣಿಗೆಯಲ್ಲಿ 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಮಧ್ಯಾಹ್ನ 2.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಕಾವೇರಿ ಉದ್ಯಾನದ ರಸ್ತೆಯಲ್ಲಿ ಸಮಾವೇಶ ನಡೆಯಲಿದೆ. ‘ಕುಮಾರಪರ್ವ’ ಬಸ್ಗೆ ವೇದಿಕೆ ರೂಪ ನೀಡಲಾಗಿದ್ದು, ಅದರ ಮೇಲೆ ಮುಖಂಡರು ಭಾಷಣ ಮಾಡಲಿದ್ದಾರೆ.
ಮತ್ತೊಂದೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ಮನೆಯ ಗೃಹ ಪ್ರವೇಶ ಮಾಡಲಿದ್ದಾರೆ.
ಇನ್ನೆರಡು ದಿನ ನಾಮಪತ್ರ ಸಲ್ಲಿಕೆ ಭರಾಟೆ
ಏ.18ರಂದು ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಮೈತ್ರಿಕೂಟ ಮತ್ತು ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ವಿಳಂಬವಾದ ಪರಿಣಾಮ ನಾಮಪತ್ರ ಸಲ್ಲಿಕೆ ಭರಾಟೆ ಇನ್ನಿರುವ ಅವಧಿಯಲ್ಲಿ ತೀವ್ರಗೊಳ್ಳಲಿದೆ.
ಮೈಸೂರು–ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಬಿಜೆಪಿಯ ಪ್ರತಾಪ್ಸಿಂಹ ಮತ್ತು ಮೈತ್ರಿ ಅಭ್ಯರ್ಥಿಯಾಗಿ ವಿಜಯಶಂಕರ್ ಮಧ್ಯೆ ನೇರ ಸ್ಪರ್ಧೆ ನಡೆಯಲಿದೆ. ತುಮಕೂರು ಕ್ಷೇತ್ರದಿಂದ ಎಚ್.ಡಿ. ದೇವೇಗೌಡ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.