ADVERTISEMENT

ರಾತ್ರಿ ಕರ್ಫ್ಯೂ ಆದೇಶದಲ್ಲಿ ಬದಲಾವಣೆ ಇಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 16:03 IST
Last Updated 28 ಡಿಸೆಂಬರ್ 2021, 16:03 IST
ಡಾ.ಕೆ.ಸುಧಾಕರ್‌
ಡಾ.ಕೆ.ಸುಧಾಕರ್‌   

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಹತ್ತು ದಿನಗಳ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಜ್ಞರ ಸಲಹೆ ಆಧರಿಸಿಯೇ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ತೀರ್ಮಾನ ಮಾಡಲಾಗಿದೆ. ಎಲ್ಲ ಸಾಧಕ ಬಾಧಕಗಳನ್ನು ನೋಡಿಕೊಂಡೇ ನಿರ್ಧಾರ ಕೈಗೊಳ್ಳಲಾಗಿದೆ. ಹತ್ತು ದಿನಗಳವರೆಗೂ ಈ ವ್ಯವಸ್ಥೆ ಮುಂದುವರಿಯಲಿದೆ’ ಎಂದರು.

ಹತ್ತು ದಿನಗಳ ಕಾಲ ರಾತ್ರಿ ಕರ್ಫ್ಯೂ ಹೇಗಿರಲಿದೆ ಎಂಬ ಮಾರ್ಗಸೂಚಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಉತ್ತಮ ರೀತಿಯಲ್ಲಿ ಮಾರ್ಗಸೂಚಿ ಪಾಲಿಸುವ ಮೂಲಕ ಜನರು ಸಂಪೂರ್ಣ ಸಹಕಾರ ನೀಡಬೇಕು. ನಂತರ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ತಜ್ಞರ ಜತೆ ಚರ್ಚಿಸಿ ಮುಂದಿನ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ADVERTISEMENT

ಕೋವಿಡ್‌ ಎರಡನೇ ಅಲೆಯಲ್ಲಿ ಏನೆಲ್ಲಾ ಆಗಿದೆ ಎಂಬುದನ್ನು ಜನರು ಅರಿಯಬೇಕು. ಯಾವ ಕಾರಣಕ್ಕಾಗಿ ಆಗ ಲಾಕ್‌ಡೌನ್‌ ಅನಿರ್ವಾಯವಾಗಿತ್ತು ಎಂಬುದನ್ನೂ ತಿಳಿಯಬೇಕು. ರಾತ್ರಿ ಕರ್ಫ್ಯೂ ಜಾರಿಗೆ ಪದೇ ಪದೇ ವಿರೋಧ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದರು.

ಕೋವ್ಯಾಕ್ಸಿನ್‌ ಲಸಿಕೆಗೆ ಬೇಡಿಕೆ: ರಾಜ್ಯದಲ್ಲಿ 15ರಿಂದ 18 ವರ್ಷ ವಯಸ್ಸಿನ 43 ಲಕ್ಷ ಮಕ್ಕಳಿಗೆ ಲಸಿಕೆ ಹಾಕಬೇಕಾಗಿದೆ. ಎಲ್ಲರಿಗೂ ಕೋವ್ಯಾಕ್ಸಿನ್‌ ಲಸಿಕೆಯನ್ನೇ ನೀಡಲು ತೀರ್ಮಾನಿಸಲಾಗಿದೆ. ಆದರೆ, ಅಷ್ಟು ಪ್ರಮಾಣದ ಕೋವ್ಯಾಕ್ಸಿನ್‌ ಲಸಿಕೆ ರಾಜ್ಯದಲ್ಲಿ ದಾಸ್ತಾನು ಇಲ್ಲ. ಹೆಚ್ಚಿನ ಪ್ರಮಾಣದಲ್ಲಿ ಕೋವ್ಯಾಕ್ಸಿನ್‌ ಲಸಿಕೆ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದು ಸುಧಾಕರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.