ADVERTISEMENT

ಅರುಣ್ ಸಿಂಗ್ ವರದಿ ಬಗ್ಗೆ ಗೊತ್ತಿಲ್ಲ: ಯೋಗೇಶ್ವರ್

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 21:21 IST
Last Updated 21 ಜೂನ್ 2021, 21:21 IST
ಸಿ.ಪಿ.ಯೋಗೇಶ್ವರ್‌
ಸಿ.ಪಿ.ಯೋಗೇಶ್ವರ್‌   

ಚನ್ನಪಟ್ಟಣ: ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದ ಹೈಕಮಾಂಡ್‌ಗೆ ಕೊಟ್ಟಿರುವ ವರದಿ ಬಗ್ಗೆ ನನಗೇನು ಗೊತ್ತಿಲ್ಲ’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಯಾವುದೇ ರಾಜಕೀಯ ವಿಚಾರ ಮಾತನಾಡುವುದಿಲ್ಲ. ಈ ಬಗ್ಗೆ ತೀರ್ಮಾನ ಮಾಡಿದ್ದೇನೆ. ಅರುಣ್ ಸಿಂಗ್ ಜೊತೆಗೆ ಚರ್ಚೆ ಮಾಡಿರುವ ವಿಚಾರವನ್ನು ಮಾಧ್ಯಮದ ಮುಂದೆ ಮಾತನಾಡುವುದಿಲ್ಲ’ ಎಂದರು.

‘ಪಕ್ಷದ ಮೂರು ಮಂದಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ವಿಚಾರದ ಬಗ್ಗೆಯೂ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಪಕ್ಷ ಏನು ಮಾಡಲಿದೆ ಎನ್ನುವುದನ್ನು ಕಾದು ನೋಡುತ್ತೇನೆ’ ಎಂದರು.

ADVERTISEMENT

ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ: ಕೋವಿಡ್ ವ್ಯಾಕ್ಸಿನ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಸಾಕಷ್ಟು ಅಪಪ್ರಚಾರ ಮಾಡಿದರು. ಈಗ ಅವರ ಮನೆಯವರೆ ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ವರ್ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಂತಹ ಕಾಂಗ್ರೆಸ್ ಧುರೀಣರು ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡಿದರು. ಆದರೆ, ಈಗ ಜನರಿಗೆ ಎಲ್ಲವೂ ಗೊತ್ತಾಗಿದೆ. ಹಾಗಾಗಿ, ಜನರೇ ಆಸ್ಪತ್ರೆಗಳಿಗೆ ಬಂದು ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಕೋವಿಡ್‌ನಿಂದ ಸಾವು, ನೋವು ಆಗಲು ಕಾಂಗ್ರೆಸ್ಸಿಗರ ಅಪಪ್ರಚಾರವೇ ಕಾರಣ. ಸೂಕ್ತ ಸಮಯದಲ್ಲಿ ಜನತೆ ವ್ಯಾಕ್ಸಿನ್ ತೆಗೆದುಕೊಂಡಿದ್ದರೆ ಸಾವು, ನೋವಿನ ಪ್ರಮಾಣ ಕಡಿಮೆಯಾಗುತ್ತಿತ್ತು. ಕಾಂಗ್ರೆಸ್ ನಾಯಕರ ಅಪಪ್ರಚಾರದಿಂದಾಗಿ ಜನತೆ ವ್ಯಾಕ್ಸಿನ್ ತೆಗೆದುಕೊಳ್ಳಲು ಹಿಂಜರಿದರು. ಇದರಿಂದ ಸಾವಿನ ಪ್ರಮಾಣದಲ್ಲಿ ಏರಿಕೆಯಾಯಿತು. ಕಾಂಗ್ರೆಸ್ ನಾಯಕರು ಈ ಪಾಪದ ಮೂಟೆ ಹೊರುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.