ADVERTISEMENT

ಸಚಿವೆ ಶಶಿಕಲಾ ಜೊಲ್ಲೆ ಜೀರೊ ಟ್ರಾಫಿಕ್ ವಿಚಾರ: ಮರು ವಿಚಾರಣೆಗೆ ಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 23:00 IST
Last Updated 7 ಫೆಬ್ರುವರಿ 2022, 23:00 IST
 ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ   

ಬೆಂಗಳೂರು: ಶಶಿಕಲಾ ಜೊಲ್ಲೆ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವ ವೇಳೆ ಅವರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ಏರ್‌ಪೋರ್ಟ್‌ನಿಂದ ವಿಧಾನಸೌಧದವರೆಗೆ ಜೀರೊ ಟ್ರಾಫಿಕ್ ಕಲ್ಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುವಿಚಾರಣೆ ನಡೆಸಲು ಹೈಕೋರ್ಟ್ ನಿರಾಕರಿಸಿದೆ.

ಜೀರೊ ಟ್ರಾಫಿಕ್ ನೀಡಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ನಗರದ ಜಿ.ಬಾಲಾಜಿ ನಾಯ್ಡು ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಅರ್ಜಿಯನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. ಅರ್ಜಿದಾರರು ನೀಡಿದ ದೂರಿನ ಮೇರೆಗೆ ಸರ್ಕಾರ ಕೈಗೊಂಡ ಕ್ರಮದ ವರದಿಯನ್ನು ನಿಮಗೆ ನೀಡಲಾಗುವುದು. ಆದೇಶದ ಕುರಿತು ಆಕ್ಷೇಪವಿದ್ದಲ್ಲಿ ಮೇಲ್ಮನವಿ ಸಲ್ಲಿಸಬಹುದು’ ಎಂದು ಅರ್ಜಿದಾರರಿಗೆ ತಿಳಿಸಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿತು.

ADVERTISEMENT

2021ರ ಆಗಸ್ಟ್ 4ರಂದು ನಡೆದ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ ಜೊಲ್ಲೆ ಅವರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಜೀರೊ ಟ್ರಾಫಿಕ್ ಕಲ್ಪಿಸಲಾಗಿತ್ತು. ‘ಇದು ಸಂವಿಧಾನದ 15ನೇ ವಿಧಿಯ ಉಲ್ಲಂಘನೆ. ಆದ್ದರಿಂದ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು‘ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.