ಮದ್ದೂರು (ಮಂಡ್ಯ ): ‘ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕು ಎಂದು ಹಲವು ಷಡ್ಯಂತ್ರ ಮಾಡುತ್ತಿದ್ದಾರೆ. ನಾನು ಜೀವಂತವಾಗಿ ಇರುವವರೆಗೂ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೋಮವಾರ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಅವರ ‘ಅಪರೂಪ’ ಅಭಿನಂದನಾ ಗ್ರಂಥಬಿಡುಗಡೆ ಮಾಡಿ ಅವರು ಮಾತನಾಡಿದರು.
‘1967ರಲ್ಲಿ ನಾನು ವಿಧಾನಸಭೆಗೆ ಬಂದೆ, ಅಂದಿನಿಂದ ಇಲ್ಲಿಯವರೆಗೂ ಹೋರಾಟದಲ್ಲೇ ಕಳೆದಿದ್ದೇನೆ. 10 ತಿಂಗಳು ಪ್ರಧಾನಿ, ಮುಖ್ಯಮಂತ್ರಿ, ನೀರಾವರಿ ಮಂತ್ರಿಯಾಗಿ 2 ಬಾರಿ ರಾಜೀನಾಮೆ ನೀಡಿದ್ದೇನೆ. ಯಾರು ಎಷ್ಟೇ ಪ್ರಯತ್ನಿಸಿದರೂ ನನ್ನ ಹೋರಾಟದ ಬದುಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ನನ್ನ ಹೋರಾಟ ನಿರಂತರವಾಗಿ ನಡೆಯಲಿದೆ’ ಎಂದರು.
‘ಎಚ್.ಡಿ.ಕುಮಾರಸ್ವಾಮಿ ಹಾಗೂ ನನನ್ನು ರಾಜಕೀಯವಾಗಿ ಮುಗಿಸಲು ಹಲವರು ಪ್ರಯತ್ನ ನಡೆಸಿ ವಿಫಲರಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಪಕ್ಷ, ರೈತರ ಬಗ್ಗೆ ರಾಜ್ಯದಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ’ ಎಂದರು.
‘ಎಚ್.ಕೆ.ವೀರಣ್ಣಗೌಡರು ನನಗೆ ಕಾಂಗ್ರೆಸ್ನಿಂದ ಟಿಕೆಟ್ ಕೊಡಿಸಲು ಪ್ರಯತ್ನಪಟ್ಟಿದ್ದರು, ಆದರೆ ಅದು ಸಾಧ್ಯವಾಗಲಿಲ್ಲ. ನಂತರ ನಾನೇ ಸ್ವತಂತ್ರ ಪಕ್ಷ ಕಟ್ಟಿ ಹೋರಾಟದ ಮೂಲಕ ಇಲ್ಲಿಯವರೆಗೂ ಸಾಗಿ ಬಂದಿದ್ದೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.