ADVERTISEMENT

ಲಾಬಿ ಮಾಡುವ ಪ್ರಮೇಯ ಬಂದಿಲ್ಲ: ಶಶಿಕಲಾ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 15:06 IST
Last Updated 16 ಡಿಸೆಂಬರ್ 2020, 15:06 IST
ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ   

ವಿಜಯಪುರ: ಸಚಿವ ಸ್ಥಾನ ಉಳಿಸಿಕೊಳ್ಳಲು ನಾನು ಯಾರ ಬಳಿಯೂ ಲಾಬಿ ಮಾಡಿಲ್ಲ. ಲಾಬಿ ಮಾಡುವ ಪ್ರಮೇಯವೇ ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸಚಿವ ರಮೇಶ ಜಾರಕಿಹೊಳಿ ಅವರ ಮನೆಗೆ ಇತ್ತೀಚೆಗೆ ಭೇಟಿ ನೀಡಿರುವ ಕುರಿತು ಹರಿದಾಡುತ್ತಿರುವ ಊಹಾಪೂಹಗಳ ಕುರಿತು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಚಿವರ ಬಳಿ ಇಲಾಖೆಗೆ ಸಂಬಂಧಿಸಿದ ಕೆಲಸದ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ ಎಂದು ಹೇಳಿದರು.

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ನಡೆಯಬೇಕು. ಎಲ್ಲ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು ಎಂದು ಜಿಲ್ಲೆಯ ಮತದಾರರಲ್ಲಿ ಮನವಿ ಮಾಡಿದರು.

ADVERTISEMENT

ಕೋವಿಡ್‌, ಅತಿವೃಷ್ಟಿಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸವಾಲಾಗಿ ಸ್ವೀಕರಿಸಿ ಜನರಿಗೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಎಲ್ಲ ಅಧಿಕಾರಿ, ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪರಿಣಾಮ ಜಿಲ್ಲೆಯಲ್ಲಿ ಕೋವಿಡ್‌ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದ್ದು, ಸಮಾಧಾನದ ಸಂಗತಿ ಎಂದರು.

ಜಿಲ್ಲೆಯಲ್ಲಿ ಭೀಮಾ, ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ಒಗಿಸುವ ಕಾರ್ಯ ನಡೆದಿದೆ. ಕೇಂದ್ರ ಸರ್ಕಾರದ ಕಿಸಾನ್‌ ಸನ್ಮಾನ್‌ ಯೋಜನೆಯಡಿ ರೈತರ ಬ್ಯಾಂಕ್‌ ಅಕೌಂಟ್‌ಗೆ ಹಣ ಹಾಕಲಾಗುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕ ಎಸ್‌.ಕೆ.ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ, ಮುಖಂಡರಾದ ಶಿವರುದ್ರ ಬಾಗಲಕೋಟೆ, ಅಶೋಕ ಮಲ್ಲಾಪುರ, ವಿಜಯಕುಮಾರ ಜೋಶಿ ದಯಾ ಸಾಗರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.