ADVERTISEMENT

ಕೊರೊನಾ ವೈರಸ್; ಆತಂಕ ಬೇಡ ಎಂದ ಸಚಿವ ಡಾ.ಕೆ.ಸುಧಾಕರ್ 

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 9:54 IST
Last Updated 4 ಮಾರ್ಚ್ 2020, 9:54 IST
ಡಾ. ಕೆ. ಸುಧಾಕರ್
ಡಾ. ಕೆ. ಸುಧಾಕರ್   

ಬೆಂಗಳೂರು: ಕೊರೊನಾ ಬಗ್ಗೆ ಜನ ಆತಂಕಪಡುವ ಅಗತ್ಯ ಇಲ್ಲ. ಆರು ತಿಂಗಳ ಮಟ್ಟಿಗೆ ಬೇಕಾದ ಔಷಧ, ಮುಖಗವಸು ಸಹಿತ ಅಗತ್ಯ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಸದಸ್ಯರ ಆತಂಕಗಳಿಗೆ ಉತ್ತರಿಸಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ 650 ಪ್ರತ್ಯೇಕ ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೊಂದಿಗೆ ಸಹ ಮಾತುಕತೆ ನಡೆಸಲಾಗಿದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸುವ ಸಿದ್ಧತೆ ನಡೆಸಲಾಗಿದೆ ಎಂದರು.

ಎನ್ಎಬಿಎಚ್ ಪ್ರಮಾಣಪತ್ರ ಹೊಂದಿದ ಪ್ರಯೋಗಾಲಯಗಳಲ್ಲಿ ಮಾತ್ರ ಕೊರೊನಾ ಪರೀಕ್ಷೆಯ ಫಲಿತಾಂಶ ನಿಖರವಾಗಿ ಬರಲು ಸಾಧ್ಯ. ಪ್ರತಿ ಜಿಲ್ಲೆಯಲ್ಲಿ ಇಂತಹ ಪರೀಕ್ಷೆ ಲಭ್ಯವಾಗುವಂತಹ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ADVERTISEMENT

ಜನರು ವದಂತಿಗಳಿಗೆ ಕಿವಿಗೊಡಬಾರದು. ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದು ಸರಿಯಲ್ಲ. ರೋಗ ಲಕ್ಷಣ ಇದ್ದವರು ಕಡ್ಡಾಯವಾಗಿ ಮುಖಗವಸು ಹಾಕಿಕೊಳ್ಳಬೇಕು. ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ. ತೆಲಂಗಾಣದ ಟೆಕಿ ಸಂಪರ್ಕದಲ್ಲಿ ಇದ್ದವರನ್ನು ಪತ್ತೆಹಚ್ಚಿ, ಅವರನ್ನು ತಪಾಸಣೆಗೆ ಒಳಪಡಿಸುವ ಕೆಲಸ ಸಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.