ಚಿತ್ರದುರ್ಗ: ಪಕ್ಷದ ವರ್ಚಸ್ಸಿಗೆ ಧಕ್ಕೆತರುವಂತಹ ಹೇಳಿಕೆ ನೀಡದಂತೆ ಹೈಕಮಾಂಡ್ ಮೌಖಿಕ ಸೂಚನೆ ನೀಡಿದೆಯೇ ಹೊರತು ನೋಟಿಸ್ ಜಾರಿ ಮಾಡಿಲ್ಲ. ಅಂತಹ ಯಾವುದೇ ಪತ್ರ ನನಗೆ ತಲುಪಿಲ್ಲ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ತಿಳಿಸಿದರು.
‘ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಪಕ್ಷಕ್ಕೆ ಹಿನ್ನಡೆ ಆಗಲಿದ್ದು, ಸುಮ್ಮನಿರುಂತೆ ಸೂಚನೆ ನೀಡಿದ್ದಾರೆ. ಇಂತಹ ಹೇಳಿಕೆ ನೀಡದಂತೆ ಕೆಪಿಸಿಸಿ ಅಧ್ಯಕ್ಷರಿಗೂ ಸೂಚನೆ ಕೊಟ್ಟಿದ್ದಾಗಿ ತಿಳಿಸಿದ್ದಾರೆ’ ಎಂದು ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎಂಬುದು ಗೊತ್ತಿದೆ. 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭಕ್ಕೆ ನಾನು ಸಾಕ್ಷಿಯಾಗಿದ್ದೇನೆ. ಯಾರಿಗೆ ಬಕೆಟ್ ಹಿಡಿದು ಮೇಲೆ ಬಂದರು ಎಂಬುದನ್ನು ಅವರಿಗೇ ಕೇಳಿ’ ಎಂದು ತಿರುಗೇಟು ನೀಡಿದರು.
‘ಆದಿಚುಂಚನಗಿರಿ ಸ್ವಾಮೀಜಿ ಅವರ ಆಶೀರ್ವಾದದಿಂದ ಬೆಳೆದಿದ್ದೇನೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೇ ನನ್ನ ರಾಜಕೀಯ ಗುರು. ಒಕ್ಕಲಿಗೆ ಸಮುದಾಯದ ವಿಚಾರದಲ್ಲಿ ತಪ್ಪು ಹೇಳಿಕೆ ನೀಡಿಲ್ಲ. ತಪ್ಪು ಪದ ಬಳಸಿದ್ದರೆ ಕ್ಷಮೆ ಕೇಳಲು ಸಿದ್ಧನಿದ್ದೇನೆ. ತಪ್ಪು ಮಾಡದೇ ಇರುವಾಗ ನಾನೇಕೆ ಕ್ಷಮೆ ಕೇಳಬೇಕು’ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.