ADVERTISEMENT

ಕನ್ನಡದ ಶಕ್ತಿ ಕುಗ್ಗಿಸಲು ಯಾರಿಗೂ ಸಾಧ್ಯವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 5:20 IST
Last Updated 1 ನವೆಂಬರ್ 2021, 5:20 IST
   

ಬೆಂಗಳೂರು: ಕನ್ನಡಕ್ಕೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ. ಕನ್ನಡದ ಶಕ್ತಿಯನ್ನು ಕುಗ್ಗಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 'ಕನ್ನಡ ಸಿಂಧೂ ನಾಗರಿಕತೆಗೂ ಮೊದಲು ಬಳಕೆಯಲ್ಲಿದ್ದ ಭಾಷೆ. ಸಹಸ್ರಾರು ವರ್ಷಗಳಿಂದ ಬಳಕೆಯಲ್ಲಿರುವ ಕನ್ನಡದ ಶಕ್ತಿ ಕಸಿಯಲು ಸೂರ್ಯ, ಚಂದ್ರರು ಇರುವವರೆಗೂ ಅಸಾಧ್ಯ' ಎಂದರು.

ಕನ್ನಡವನ್ನು ಎಲ್ಲ ಆಯಾಮಗಳಲ್ಲೂ ಬಳಕೆಗೆ ತರುವ ಮೂಲಕ ಮತ್ತಷ್ಟು ಶಕ್ತಿ ತುಂಬಬೇಕಿದೆ. ಅದಕ್ಕೆ ಪೂರಕವಾಗಿ ತಾಂತ್ರಿಕ ಶಿಕ್ಷಣವನ್ನು ಕನ್ನಡದಲ್ಲಿ ಬೋಧಿಸುವ ಕೆಲಸವನ್ನು ತಮ್ಮ ಸರ್ಕಾರ ಆರಂಭಿಸಿದೆ. ಈ ವಿಚಾರದಲ್ಲಿ ಗಟ್ಟಿಯಾದ ನಿಲುವನ್ನು ಸರ್ಕಾರ ಹೊಂದಿದೆ ಎಂದರು.

ADVERTISEMENT

ಕನ್ನಡದ ಮಕ್ಕಳಿಗೆ ಉದ್ಯೋಗದ ಭರವಸೆಯನ್ನು ನೀಡಬೇಕಿದೆ. ಆಗ ಮಾತ್ರ ಕನ್ನಡ, ಕನ್ನಡಿಗರ ಶಕ್ತಿ ಹೆಚ್ಚುತ್ತದೆ. ಅದಕ್ಕಾಗಿ ಕೈಗಾರಿಕಾ ತರಬೇತಿ ಕೇಂದ್ರಗಳು, ಪಾಲಿಟೆಕ್ನಿಕ್ ಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದಲ್ಲಿ ಆರಂಭವಾಗುವ ಉದ್ದಿಮೆಗಳಲ್ಲಿ ಕೌಶಲ ವಲಯದ ಶೇಕಡ 75ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು .

ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಬೇಕು‌ ಅದಕ್ಕಾಗಿ ಕಲ್ಯಾಣ ಕರ್ನಾಟಕಕ್ಕೆ ಮುಂದಿನ ಬಜೆಟ್ ನಲ್ಲಿ ₹3000 ಕೋಟಿ ವಿಶೇಷ ಅನುದಾನ ಒದಗಿಸಲಾಗುವುದು. ಕಿತ್ತೂರು ಕರ್ನಾಟಕದ ಅಭಿವೃದ್ಧಿ ಹಾಗೂ ಮೈಸೂರು ಕರ್ನಾಟಕದಲ್ಲಿ ಬಾಕಿ ಇರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ಕರ್ನಾಟಕ ರಾಜ್ಯೋತ್ಸವ ಕನ್ನಡಿಗರ ಜನೋತ್ಸವ ಆಗಬೇಕು. ಇಡೀ ರಾಜ್ಯದ ಅಭಿವೃದ್ಧಿ ಆದರೆ ಜನೋತ್ಸವವನ್ನು ಕಾಣಲು ಸಾಧ್ಯ. ಅದಕ್ಕೆ ಪೂರಕವಾಗಿ ಸರ್ಕಾರ ಕೆಲಸ ಮಾಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.