ನವದೆಹಲಿ: ‘ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯಿಂದ ಆಗುವ ವರಮಾನ ನಷ್ಟಕ್ಕೆ ಎಲ್ಲ ರಾಜ್ಯಗಳಿಗೆ ಪರಿಹಾರ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಯಾವುದೇ ಪರಿಹಾರ ಬಾಕಿ ಇಲ್ಲ’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸ್ಪಷ್ಟಪಡಿಸಿದರು.
ಲೋಕಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.
ಜಿಎಸ್ಟಿ ಜಾರಿಯಾದ ಮೇಲೆ ರಾಜ್ಯಗಳಿಗೆ ಶೇ 14ರಷ್ಟು ನಷ್ಟ ಪರಿಹಾರ ನೀಡುವ ವ್ಯವಸ್ಥೆ 2017ರ ಜುಲೈನಲ್ಲಿ ಆರಂಭವಾಯಿತು. ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ ಬಳಿಕ ರಾಜ್ಯಗಳಿಗೆ ಆಗುವ ನಷ್ಟವನ್ನು ಭರಿಸಲು ಈ ಯೋಜನೆ ಜಾರಿ ಮಾಡಲಾಗಿತ್ತು. ನಷ್ಟ ಪರಿಹಾರ ವ್ಯವಸ್ಥೆ 2022ರ ಜೂನ್ ಅಂತ್ಯಕ್ಕೆ ಕೊನೆಗೊಂಡಿದೆ. ಆದರೆ, 2022ರ ಜೂನ್ ವರೆಗಿನ ₹2,330 ಕೋಟಿ ಪರಿಹಾರ ಎರಡು ವರ್ಷ ಕಳೆದರೂ ಬಿಡುಗಡೆಯಾಗಿಲ್ಲ ಎಂದು ಕರ್ನಾಟಕ ಸರ್ಕಾರ ಹಲವು ಸಲ ಆರೋಪ ಮಾಡಿದೆ. ಜತೆಗೆ, ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಆದರೆ, ಈ ಆರೋಪವನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.