ಬೆಂಗಳೂರು: 'ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ಹೇಳುತ್ತಿದ್ದೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, 'ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನ ಬಂಧನವಾಗಿದೆ' ಎಂದರು.
'ಷಡ್ಯಂತ್ರ ನಡೆದಿದೆ ಎಂದು ಮೊದಲು ಗಮನ ಸೆಳೆದಿದ್ದು ನೀವು' ಎನ್ನುವ ಬಗ್ಗೆ ಕೇಳಿದಾಗ, 'ಬಿಜೆಪಿಯವರು ಇದುವರೆಗೂ ಏನೂ ಮಾತನಾಡಿರಲಿಲ್ಲ. ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದರು. ನಾನು 'ಷಡ್ಯಂತ್ರ' ವಿಚಾರ ಪ್ರಸ್ತಾವ ಮಾಡಿದ ನಂತರ ಮಾತನಾಡುತ್ತಿದ್ದಾರೆ' ಎಂದರು.
'ಧರ್ಮಸ್ಥಳದ ಕುಟುಂಬದವರೇ ಬಂದು ಮುಖ್ಯಮಂತ್ರಿಯ ಬಳಿ ಮಾತನಾಡಿ, ನೀವು ಎಸ್ ಐಟಿ ರಚನೆ ಮಾಡಿರುವುದು ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ. ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಇದ್ದರೂ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ, ಗೃಹ ಸಚಿವರು ಸದನದಲ್ಲಿ ಹಾಗೂ ಸಿಎಲ್ ಪಿ ಸಭೆಯಲ್ಲೂ ತಿಳಿಸಿದ್ದಾರೆ' ಎಂದರು.
ಅನನ್ಯಾ ಭಟ್ ನನ್ನ ಮಗಳೇ ಅಲ್ಲ ಎಂದು ಸುಜಾತ ಭಟ್ ಹೇಳಿಕೆ ಬಗ್ಗೆ ಕೇಳಿದಾಗ, 'ಇದನ್ನು ಗೃಹಸಚಿವರು ನೋಡಿಕೊಳ್ಳುತ್ತಾರೆ' ಎಂದರು.
ಸುರ್ಜೇವಾಲ ಅವರ ಜೊತೆಗಿನ ಸಭೆಯ ಬಗ್ಗೆ ಕೇಳಿದಾಗ, 'ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸಬೇಕಲ್ಲವೇ? ಆದ ಕಾರಣ ಸಭೆ ಕರೆದು ಜವಾಬ್ದಾರಿ ಹಂಚಿಕೆ ಮಾಡುತ್ತಿದ್ದೇವೆ. ನ್ಯಾಯಾಲಯ ಚುನಾವಣೆ ನಡೆಸಿ ಎಂದ ಮೇಲೆ ಕಡೆಗಣಿಸಬಾರದಲ್ಲವೇ?' ಎಂದರು.
ಜನಾಧಿಕಾರ ಯಾತ್ರೆಯಲ್ಲಿ ಭಾಗಿ: ಬಿಹಾರಕ್ಕೆ ತೆರಳುತ್ತಿರುವ ಬಗ್ಗೆ ಕೇಳಿದಾಗ, 'ಬಿಹಾರದಲ್ಲಿ ಕಾಂಗ್ರೆಸ್ ಜನಾಧಿಕಾರ ಯಾತ್ರೆ ನಡೆಯುತ್ತಿದೆ. ಹೀಗಾಗಿ, ಶಾಸಕರ ಜೊತೆ ತೆರಳುತ್ತಿದ್ದೇನೆ. ಮುಖ್ಯಮಂತ್ರಿಯನ್ನೂ ಆಹ್ವಾನ ಮಾಡಿದ್ದು ಅವರೂ ಇನ್ನೊಂದು ದಿನ ತೆರಳುತ್ತಿದ್ದಾರೆ.
'ಎಷ್ಟು ಮಂದಿ ಶಾಸಕರು ತೆರಳುತ್ತಿದ್ದೀರಾ' ಎಂಬ ಪ್ರಶ್ನೆಗೆ, "ಜಾಗ ಎಷ್ಟಿದೆಯೋ ಅಷ್ಟು ಮಂದಿ" ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.