ADVERTISEMENT

ದ್ವಿತೀಯ ಪಿಯು ಪರೀಕ್ಷೆ ಅಬಾಧಿತ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ: ಸಚಿವ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2020, 5:47 IST
Last Updated 22 ಮಾರ್ಚ್ 2020, 5:47 IST
   

ಬೆಂಗಳೂರು: ಮಾರ್ಚ್‌ 27ರಿಂದ ಆರಂಭವಾಗಬೇಕಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಲು ಸರ್ಕಾರ ನಿರ್ಧರಿಸಿದೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆಗಳು ಕೊನೆಗೊಳ್ಳಲು ಇನ್ನೊಂದೇ ವಿಷಯ ಬಾಕಿ ಉಳಿದಿದ್ದು ಅದನ್ನು ಎಂದಿನಂತೇ ಸೋಮವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

‘ಸೋಮವಾರ ನಡೆಯಲಿರುವ ದ್ವಿತೀಯ ಪಿಯು ಅಂತಿಮ ವಿಷಯದ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬಹುದು.’ ಎಂದು ಸುರೇಶ್‌ ಕುಮಾರ್‌ ತಿಳಿಸಿದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಗ ಮುಗಿಯಬೇಕೆಂಬ ಆಸೆ ಮಕ್ಕಳಲ್ಲಿದೆ. ಇದೇ ಕಾರಣಕ್ಕೆ ಎಲ್ಲ ಸುರಕ್ಷಿತ ವ್ಯವಸ್ಥೆಗಳನ್ನು ಚರ್ಚಿಸಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಆದರೆ, ಆರೋಗ್ಯ ಇಲಾಖೆಯೂ ಸೇರಿದಂತೆ ಹಲವರ ಅಭಿಪ್ರಾಯದಂತೆ ಪರೀಕ್ಷೆ ಮುಂದೂಡಲಾಗಿದೆ,’ ಎಂದು ಅವರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

‘ಪರೀಕ್ಷೆ ಬರೆದು ಸುಖವಾಗಿರಬೇಕು ಎಂಬುದು ವಿದ್ಯಾರ್ಥಿಗಳ ಆಸೆ. ಅವರ ಆರೋಗ್ಯವನ್ನು ಕಾಪಾಡಬೇಕೆಂಬ ಹಿತ ಸರ್ಕಾರದ್ದು. ಸುಖ, ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಪರೀಕ್ಷೆಯನ್ನು ಬೇರೆ ದಿನಾಂಕದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಹೊಸ ವೇಳಾಪಟ್ಟಿಯನ್ನು ಸದ್ಯದಲ್ಲೇ ಪ್ರಕಟಿಸುತ್ತೇವೆ. ವಿದ್ಯಾರ್ಥಿಗಳು ಮತ್ತಷ್ಟು ಅಧ್ಯಯನ ಮಾಡಬೇಕು. ಯಾರೂ ಹತಾಶರಾಗಬಾರದು. ಈ ವಿಶೇಷ ವಿಸ್ತರಿತ ರಜೆಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಾನು ಶುಭ ಕೋರುತ್ತೇನೆ,’ ಎಂದು ಸುರೇಶ್‌ ಕುಮಾರ್ ಆಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.