ADVERTISEMENT

ಅಧಿಕೃತ ಕಲ್ಲು ಗಣಿ, ಕ್ರಷರ್‌ಗೆ ಅಡ್ಡಿ ಇಲ್ಲ

ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 18:31 IST
Last Updated 2 ಫೆಬ್ರುವರಿ 2021, 18:31 IST

ಬೆಂಗಳೂರು: ಪರವಾನಗಿ ಪಡೆದು ನಡೆಸುತ್ತಿರುವ ಕಲ್ಲು ಗಣಿಗಳು ಮತ್ತು ಅವುಗಳಿಂದ ಕಲ್ಲು ಪಡೆದು ಬಳಕೆ ಮಾಡುತ್ತಿರುವ ಕ್ರಷರ್‌ಗಳಿಗೆ ಯಾವುದೇ ರೀತಿಯ ಅಡಚಣೆ ಮಾಡದಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಸಂಬಂಧಿಸಿದ ಚರ್ಚೆಯಲ್ಲಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಕಲ್ಲು ಗಣಿಗಾರಿಕೆ ಕುರಿತು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ‘ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕಲ್ಲು ಗಣಿಗಾರಿಕೆ ಅಗತ್ಯ. ಸಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿ ಮತ್ತು ಕ್ರಷರ್‌ಗಳಿಗೆ ಯಾವ ರೀತಿಯಲ್ಲೂ ತೊಂದರೆ ಆಗದು’ ಎಂದು ಭರವಸೆ ನೀಡಿದರು.

ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಅನಧಿಕೃತ ಮೂಲಗಳಿಂದ ಕಲ್ಲು ಪಡೆದು ಬಳಕೆ ಮಾಡುವ ಕ್ರಷರ್‌ಗಳು ಇದ್ದಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳನ್ನು ಗುರುತಿಸಿ, ಪರವಾನಗಿ ಹಂಚಿಕೆಗೆ ಅವಕಾಶ ಇದ್ದಲ್ಲಿ ಆ ಕ್ರಮವನ್ನೂ ಕೈಗೊಳ್ಳಲಾಗುವುದು. ನ್ಯಾಯಬದ್ಧವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವವರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗುವುದಿಲ್ಲ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.