ಬೆಂಗಳೂರು: ಉತ್ತರ ಕರ್ನಾಟಕದ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿ ಯೋಜನೆಗೆ ಯಾವುದೇ ರೀತಿಯ ಅಡ್ಡಿ ಎದುರಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
‘ಮಹದಾಯಿ ಯೋಜನೆಯಿಂದ ಗೋವಾದ ಪರಿಸರಕ್ಕೆ ಹಾನಿಯಾಗಲಿದ್ದು, ಯಾವುದೇ ರೀತಿಯಲ್ಲೂ ರಾಜಿ ಮಾಡಿಕೊಳ್ಳುವುದಿಲ್ಲ’ ಎಂಬ ಅಲ್ಲಿನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆ ಕುರಿತು ಭಾನುವಾರ ನೆಲಮಂಗಲದಲ್ಲಿ ಪ್ರತಿಕ್ರಿಯಿಸಿದ ಅವರು, ‘ಗೋವಾ ಮುಖ್ಯಮಂತ್ರಿ ರಾಜಕೀಯ ಸ್ವಾರ್ಥಕ್ಕಾಗಿ ಆ ರೀತಿಯ ಹೇಳಿಕೆ ನೀಡಿದ್ದಾರೆ. ಕನ್ನಡಿಗರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ’ ಎಂದರು.
ಮಹದಾಯಿ ವಿಚಾರದಲ್ಲಿ ನ್ಯಾಯಾಲಯದಲ್ಲೂ ಕರ್ನಾಟಕಕ್ಕೆ ಅನುಕೂಲಕರವಾದ ವಾತಾವರಣ ಇದೆ. ಮಹದಾಯಿ ನೀರು ಕರ್ನಾಟಕಕ್ಕೆ ಸಿಗಬೇಕು ಎಂಬ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಮಹದಾಯಿ ನದಿ ನೀರು ಹಂಚಿಕೆ ಸಮಸ್ಯೆಯ ಶೀಘ್ರ ಇತ್ಯರ್ಥಕ್ಕೆ ಪ್ರಯತ್ನಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಪ್ರಮುಖರಿಗೂ ಈ ಕುರಿತು ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.