ಬೆಂಗಳೂರು: ‘ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಅನಗತ್ಯ ನಿರ್ಬಂಧಗಳನ್ನು ಹೇರಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೋವಿಡ್ ನಾಲ್ಕನೇ ಅಲೆ ನಿಯಂತ್ರಿಸುವ ಸಂಬಂಧ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಬುಧವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಅಗತ್ಯ ಇರುವಷ್ಟು ನಿರ್ಬಂಧಗಳನ್ನು ಮಾತ್ರ ಜಾರಿಗೊಳಿಸಲು ಪ್ರಧಾನಿ ನಿರ್ದೇಶನ ನೀಡಿದ್ದಾರೆ’ ಎಂದರು.
‘ಲಸಿಕೆ ನೀಡುವುದನ್ನು ಚುರುಕು ಗೊಳಿಸಬೇಕು. 6 ವರ್ಷದಿಂದ 12 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕಾ ಅಭಿಯಾನ ನಡೆಸಬೇಕು. 15ರಿಂದ 18 ವರ್ಷದೊಳಗಿನವರು, 60 ವರ್ಷ ಮೇಲ್ಪಟ್ಟವರಿಗೂ ಆದ್ಯತೆ ಮೇಲೆ ಲಸಿಕೆ ನೀಡಬೇಕು ಎಂದು ಸೂಚಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
‘ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಸಿದ್ಧತೆಗೂ ಪ್ರಧಾನಿ ಸಲಹೆ ನೀಡಿದ್ದಾರೆ. ಅಲ್ಲದೆ, ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳನ್ನು ತಪ್ಪಿಸಲು ಅಗ್ನಿಶಾಮಕ ಸೌಲಭ್ಯಗಳ ಕುರಿತು ತಪಾಸಣೆಗೂ ಸೂಚಿಸಿದ್ದಾರೆ. ಈ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದರು.
ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಪ್ರಧಾನಿಯವರಿಗೆ ಮಾಹಿತಿ ನೀಡಲಾಯಿತು. ಏಪ್ರಿಲ್ 9 ರ ಬಳಿಕ ಬೆಂಗಳೂರಿನಲ್ಲಿ ಸೋಂಕು ಪ್ರಕರಣಗಳ ದೃಢಪ್ರಮಾಣ ಸ್ವಲ್ಪ ಏರಿಕೆಯಾಗಿದೆ. ರಾಜ್ಯದಲ್ಲಿ ನಿತ್ಯ ಬೆಂಗಳೂರಿನಲ್ಲಿ 10,000, ಉಳಿದ ಕಡೆ 20,000 ಮಾದರಿಗಳ ಪರೀಕ್ಷೆ ನಡೆಯುತ್ತಿದೆ. ಅಂತರರಾಷ್ಟ್ರೀಯ ಪ್ರಯಾಣಿಕರಲ್ಲಿ ಶೇ 2ರಷ್ಟು ಮಂದಿಗೆ ಪರೀಕ್ಷೆ ಮಾಡಲಾಗುತ್ತಿದೆ. ಎಂಟು ದೇಶಗಳಿಂದ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದೆ. ಈ ಎಲ್ಲ ವಿವರಗಳನ್ನು ಪ್ರಧಾನಿಯವರಿಗೆ ನೀಡಲಾಯಿತು ಎಂದರು.
ರಾಜ್ಯದ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು, 1,100 ಟನ್ ಆಮ್ಲಜನಕ ಸಂಗ್ರಹಿಸಿಟ್ಟುಕೊಳ್ಳುವ ಸಾಮರ್ಥ್ಯ ವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 50,000 ಹಾಸಿಗೆಗಳು, ಖಾಸಗಿ ಆಸ್ಪತ್ರೆಗಳಲ್ಲಿ 1 ಲಕ್ಷ ಹಾಸಿಗೆಗಳು ಕೋವಿಡ್ ರೋಗಿಗಳ ಚಿಕಿತ್ಸೆಗೆ ಲಭ್ಯವಿವೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.