ಯಶವಂತಪುರ: ಬೆಂಗಳೂರು ದಕ್ಷಿಣ ತಾಲ್ಲೂಕು ಕೆ.ಗೊಲ್ಲಹಳ್ಳಿ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸಲ್ಲಿಕೆಯಾಗಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಯಿತು.
27 ಸದಸ್ಯರನ್ನು ಹೊಂದಿರುವ ಪಂಚಾಯಿತಿಯಲ್ಲಿ 20 ಸದಸ್ಯರು ಅಧ್ಯಕ್ಷ ಆರ್.ಮುನಿರಾಜು ಅವರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿ ಮೇ 18ರಂದು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.
ಗುರುವಾರ ಅವಿಶ್ವಾಸ ನಿರ್ಣಯ ಸಭೆ ನಿಗದಿ ಪಡಿಸಲಾಗಿತ್ತು. ಸಭೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಮುನಿರಾಜು ಅವರೊಬ್ಬರೇ ಹಾಜರಾಗಿದ್ದರು. ಕೋರಂ ಕೊರತೆ ಹಿನ್ನೆಲೆಯಲ್ಲಿ, ಬೆಂಗಳೂರು ದಕ್ಷಿಣ ಉಪವಿಭಾಗ ದಂಡಾಧಿಕಾರಿ ಹರೀಶ್ ನಾಯಕ್ ಸಭೆ ನಡೆಸಿ ಅವಿಶ್ವಾಸ ನಿರ್ಣಯದ ಸಭೆ ಮುಕ್ತಾಯಗೊಳಿಸಿದರು.
ಅವಿಶ್ವಾಸ ನಿರ್ಣಯ ಮಂಡನೆ ಹಿನ್ನೆಲೆಯಲ್ಲಿ ಕಚೇರಿ ಮುಂದೆ ನೂರಾರು ಜನ ಜಮಾಯಿಸಿದ್ದರು. ಬಿಗುವಿನ ವಾತಾವರಣ ಏರ್ಪಟ್ಟಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ನಿರ್ಣಯ ಮಂಡನೆ ಬಳಿಕ ಮಾತನಾಡಿದ ಆರ್.ಮುನಿರಾಜು, ಗ್ರಾಮ ಪಂಚಾಯಿತಿ ಸದಸ್ಯರು ಒತ್ತಡಕ್ಕೆ ಸಿಲುಕಿ ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದರು. ನನ್ನ ಮೇಲಿನ ವಿಶ್ವಾಸ ಹಾಗೂ ಅಭಿವೃದ್ಧಿ ದೃಷ್ಟಿಕೋನದಿಂದ ಅವಿಶ್ವಾಸ ನಿರ್ಣಯ ಸಭೆಯಲ್ಲಿ ಯಾರೊಬ್ಬರೂ ಪಾಲ್ಗೊಂಡಿಲ್ಲ. ಮುಂದೆ ಅಭಿವೃದ್ಧಿ ಕಾರ್ಯದಲ್ಲಿ ಇನ್ನೂ ಹೆಚ್ಚು ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.