ADVERTISEMENT

ಕೋವಿಡ್‌ ನಿರ್ವಹಣೆಗೆ ನೋಡಲ್‌ ಅಧಿಕಾರಿಗಳೇ ಹೊಣೆ: ಮುಖ್ಯಮಂತ್ರಿ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 14:01 IST
Last Updated 22 ಏಪ್ರಿಲ್ 2021, 14:01 IST
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ    

ಬೆಂಗಳೂರು: ‘ಬೆಂಗಳೂರಿನಲ್ಲಿ ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಆಯಾ ವಲಯದ ಕೋವಿಡ್ ನಿರ್ವಹಣೆಗೆ ನೇಮಿಸಿದ ನೋಡಲ್ ಅಧಿಕಾರಿಗಳು ಸಂಪೂರ್ಣ ಜವಾಬ್ದಾರರು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಸಂಪುಟದ ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳ ಜೊತೆ ಗುರುವಾರ ಅವರು ವರ್ಚುವಲ್ ಸಭೆ ನಡೆಸಿದರು.

ಚಿತಾಗಾರಗಳಿಗೆ ಶವ ಸಾಗಿಸುವ ಅಂಬ್ಯುಲೆನ್ಸ್ ಗಳು ತಾಸುಗಟ್ಟಲೆ ಸರದಿಯಲ್ಲಿ ನಿಲ್ಲುವುದರಿಂದ ಶವಗಳನ್ನು ಸಾಗಿಸಲು ಅಂಬ್ಯುಲೆನ್ಸ್‌ಗಳ ಕೊರತೆ ಆಗಿರುವುದರಿಂದ ಶವಗಳನ್ನು ಇರಿಸಲು ಚಿತಾಗಾರಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲು ಮತ್ತು ಕೋವಿಡ್ ನಿರ್ವಹಣೆಯಲ್ಲಿ ಸಾಧ್ಯವಿರುವಲ್ಲಿ ಸ್ವಯಂ ಸೇವಕರ ನೆರವು ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.

ADVERTISEMENT

’ನಗರದಲ್ಲಿ ಈಗಾಗಲೇ ಆಕ್ಸಿಜನ್ ಪೂರೈಕೆ ಮತ್ತು ಔಷಧ ಕೊರತೆಯ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಲಸಿಕೆಗಳ ಕೊರತೆ ಕೂಡಾ ಇಲ್ಲ’’ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸಭೆಗೆ ಮಾಹಿತಿ ನೀಡಿದರು.

‘ನಗರದಲ್ಲಿ ಫೀವರ್ ಕ್ಲಿನಿಕ್‌ಗಳನ್ನು ಬಲಪಡಿಸಿ, ಜ್ವರ, ಮತ್ತಿತರ ಲಕ್ಷಣ ಹೊಂದಿರುವವರ ಪರೀಕ್ಷೆ ಹಾಗೂ ಸೂಕ್ತ ಮಾರ್ಗದರ್ಶನ ನೀಡಲುಸಭೆಯಲ್ಲಿ ತೀರ್ಮಾನಿಸಲಾಯಿತು. ಇದರಿಂದ ಅಗತ್ಯವಿರುವವರಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ. ಸಹಾಯವಾಣಿಗಳನ್ನು ಇನ್ನಷ್ಟು ಬಲಪಡಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

’ಹೋಮ್ ಐಸೋಲೇಷನ್‌ನಲ್ಲಿ ಇರುವವರ ಚಿಕಿತ್ಸೆ, ಟೆಲಿ ಕನ್ಸಲ್ಟೇಷನ್ ಒದಗಿಸಲು ಹಾಗೂ ಅವರ ಮೇಲೆ ನಿಗಾ ವಹಿಸಲು ಆದ್ಯತೆ ನೀಡಬೇಕು. ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಬೆಡ್‌ಗಳನ್ನು ಒದಗಿಸುವುದನ್ನು ಖಾತರಿ ಪಡಿಸಬೇಕು. ಆಯಾ ವಲಯಗಳ ಡಿಸಿಪಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗೆ ಸ್ಥೈರ್ಯ ತುಂಬಬೇಕು’ ಎಂದೂ ಸೂಚಿಸಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ್, ಎಸ್. ಸುರೇಶ್ ಕುಮಾರ್, ವಿ.ಸೋಮಣ್ಣ, ಎಂ.ಟಿ.ಬಿ. ನಾಗರಾಜ್, ಎಸ್.ಟಿ.ಸೋಮಶೇಖರ್, ಕೆ. ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.