ADVERTISEMENT

ಗ್ರೇಟರ್ ಅಲ್ಲ, ಲೂಟರ್‌ಗಳ ಬೆಂಗಳೂರು: ಎಚ್‌ಡಿಕೆ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಮೇ 2025, 12:28 IST
Last Updated 18 ಮೇ 2025, 12:28 IST
   

ಬೆಂಗಳೂರು: ‘ಗ್ರೇಟರ್‌ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ. ಕಡಿಮೆ ಮಳೆಯಾದರೆ ತೇಲುತ್ತದೆ. ಇದು ಗ್ರೇಟರ್‌ ಬೆಂಗಳೂರು ಅಲ್ಲ, ಲೂಟರ್‌ ಬೆಂಗಳೂರು’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಶನಿವಾರ ಸಂಜೆ ಮತ್ತು ರಾತ್ರಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದ ಚಿತ್ರಗಳನ್ನು ಪೋಸ್ಟ್‌ ಮಾಡಿರುವ ಅವರು, ‘ರಸ್ತೆಗಳಲ್ಲಿಯೇ ಕೆರೆ, ಚರಂಡಿ. ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ, ಸುರಂಗ ಮಾರ್ಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು’ ಎಂದಿದ್ದಾರೆ.

‘ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ. ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋ ಇಚ್ಛೆ ಒಡೆದು ಬಡಿದು ನುಂಗಲು. ನಾಡು ಎಂದರೆ ಕಲ್ಲು ಬಂಡೆಗಳಲ್ಲ, ನಾಡು ಎಂದರೆ ಮನುಷ್ಯರು’ ಎಂದಿದ್ದಾರೆ.

ADVERTISEMENT

‘ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ? ಕೆರೆ ನೀರಿಗೆ ಕಮಿಷನ್‌ನ ಕೋಡಿ ಬಿದ್ದಿದೆ. ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆಯೇಕೆ? ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ? ನಗರದ ಜನರ ಬೆವರಿನ ಹಣ ಏನಾಗುತ್ತಿದೆ’ ಎಂದು ಪ್ರಶ್ನಿಸಿದ್ದಾರೆ.

‘ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ಆದರೆ, ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ. ಹೊಸ ಶೀಶೆ, ಹಳೇ ಮದ್ಯ. ಹಳೇ ಕಾಮಗಾರಿ, ಹೊಸ ಬಿಲ್ಲು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.