ಹೊಳೆನರಸೀಪುರ (ಹಾಸನ): ’ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಯಾರು ಏನೇ ಹೇಳಿದರೂ ನನ್ನ ಮತ್ತು ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಸೃಷ್ಟಿ ಮಾಡಲು ಸಾಧ್ಯವಿಲ್ಲ‘ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಹಾಸನ ಕ್ಷೇತ್ರದಲ್ಲಿ ಸ್ಪರ್ಧಿಸಲು ಭವಾನಿ ರೇವಣ್ಣ ಹೆಸರನ್ನು ಮುನ್ನೆಲೆಗೆ ತಂದವರು ನಾವಲ್ಲ, ಕಾರ್ಯಕರ್ತರು. ಅದು ಅವರ ಅಭಿಮಾನ. ಟಿಕೆಟ್ ವಿಷಯದಲ್ಲಿ ಯಾವುದೇ ನಿರ್ಧಾರ ಆಗಿಲ್ಲ‘ ಎಂದರು.
‘ಹಾಸನ ಕ್ಷೇತ್ರದ ಜೆಡಿಎಸ್ ಪಕ್ಷದ ಟಿಕೆಟ್ ವಿಷಯದಲ್ಲಿ ಇತ್ತೀಚಿನ ಬೆಳವಣಿಗೆಗಳಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಭವಾನಿ ರೇವಣ್ಣ ಅವರಿಗೆ ಸೂರಜ್, ಪ್ರಜ್ವಲ್ ಟಿಕೆಟ್ ಕೊಡಿಸಲು ಸಾಧ್ಯ ಇಲ್ಲ. ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ಎಚ್.ಡಿ. ದೇವೇಗೌಡರು, ಎಚ್.ಡಿ. ಕುಮಾರಸ್ವಾಮಿ, ನಾನು, ಜಿಲ್ಲೆಯ ಶಾಸಕರು ಸೇರಿ ಹಾಸನ ಸೇರಿದಂತೆ ಏಳು ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡುತ್ತೇವೆ. ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅವರನ್ನು ಗೆಲ್ಲಿಸುವುದು ಕಾರ್ಯಕರ್ತರ ಕರ್ತವ್ಯ’ ಎಂದರು.
’ಕುಮಾರಸ್ವಾಮಿ ಆಡಳಿತದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಕಂಡಿರುವ ಜನ, ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕಾರ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ‘ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.