ADVERTISEMENT

ಎಸ್.ಎಂ.ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ 'ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 20:21 IST
Last Updated 25 ಜೂನ್ 2022, 20:21 IST
   

ಬೆಂಗಳೂರು: ‘ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರ ಕೊಡ ಮಾಡುತ್ತಿರುವ 'ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ಇನ್ಪೊಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಬ್ಯಾಡ್ಮಿಂಟನ್ ಆಟಗಾರ ಪ್ತಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ‘ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇದೇ 27ರಂದು ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ ₹ 5 ಲಕ್ಷ ನಗದು ಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಚಿವ ಅಶ್ವತ್ಥ ನಾರಾಯಣ ಅವರು, ಕೃಷ್ಣ ಅವರನ್ನು ಶನಿವಾರ ಅವರ ಮನೆಯಲ್ಲಿ ಭೇಟಿಯಾಗಿ, ಕೆಂಪೇಗೌಡ ಜಯಂತಿಗೆ ಬಂದು ಪ್ರಶಸ್ತಿ ಸ್ವೀಕರಿಸುವಂತೆ ಆಹ್ವಾನ ನೀಡಿದರು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ‘ಮೂವರೂ ಪ್ರಶಸ್ತಿ ಪುರಸ್ಕೃತರು ಬೆಂಗಳೂರಿನ ಬೆಳವಣಿಗೆಗೆ ಮತ್ತು ಕೀರ್ತಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ' ಎಂದರು.

ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟ್‌ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಇದರಲ್ಲಿ ಉದ್ಯಮಿ ಮೋಹನದಾಸ್ ಪೈ, ವಿವೇಕಾನಂದ ಯೂತ್ ಮೂವ್ ಮೆಂಟ್ ಸ್ಥಾಪಕ ಆರ್. ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ .ಶಂಕರಲಿಂಗೇಗೌಡ ಅವರು ಸದಸ್ಯರಾಗಿದ್ದರು. ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್. ವಿನಯದೀಪ್ ಅವರು ಸದಸ್ಯ ಕಾರ್ಯದರ್ಶಿ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.