ಬೆಂಗಳೂರು: ‘ರಾಜ್ಯದ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯ ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುವುದನ್ನು ತಡೆಯಲು ಕಟ್ಟುನಿಟ್ಟಿನ ಮತ್ತು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು’ ಎಂದು ಇಲಾಖೆಯ ಅಧಿಕಾರಿಗಳಿಗೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಸೂಚನೆ ನೀಡಿದ್ದಾರೆ.
‘ಅಸಮರ್ಪಕ ಮತ್ತು ಅವೈಜ್ಞಾನಿಕವಾಗಿ ಹೂಳು ತೆಗೆಯುವುದರಿಂದ ಕೆರೆಗಳಲ್ಲಿನ ನೀರು ಇಂಗಿ, ನೀರಿನ ಅಭಾವಕ್ಕೆ ಕಾರಣವಾಗುತ್ತಿದೆ. ಅಂತರ್ಜಲ ಮಟ್ಟವೂ ಗಣನೀಯವಾಗಿ ಕ್ಷೀಣಿಸುತ್ತಿದೆ’ ಎಂದು ಅವರು ತಿಳಿಸಿದ್ದಾರೆ.
‘ಕೆಲವು ಪ್ರಕರಣಗಳಲ್ಲಿ ನಿರ್ದಿಷ್ಟ ಮಿತಿಗಿಂತ ಹೆಚ್ಚು ಹೂಳು ಎತ್ತುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೂ ನಷ್ಟ ಉಂಟಾಗುತ್ತಿದೆ. ಹೀಗಾಗಿ, ಇಂತಹ ಚಟುವಟಿಕೆಯ ವಿರುದ್ದ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲ ವೃತ್ತಗಳ ಸೂಪರಿಟೆಂಡೆಂಟ್ ಎಂಜಿನಿಯರ್ಗಳಿಗೆ ಮತ್ತು ಎಲ್ಲ ವಿಭಾಗಗಳ ಕಾರ್ಯಪಾಲಕ ಎಂಜಿನಿಯರ್ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು’ ಎಂದು ಇಲಾಖೆಯ ಕಾರ್ಯದರ್ಶಿಗೆ ಸಚಿವರು ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.