ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ‘ರೈಲ್ವೆ ಇಲಾಖೆ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ನೌಕರರ ಮಕ್ಕಳಿಗೆ ರಾಜ್ಯ ಸರ್ಕಾರ ಒಬಿಸಿ, ಒಬಿಸಿ–ಎನ್ಸಿಎಲ್ ಪ್ರಮಾಣ ಪತ್ರ ನೀಡುತ್ತಿಲ್ಲ. ಇದರಿಂದ ನಮ್ಮ ಮಕ್ಕಳು ಕೇಂದ್ರ ಸರ್ಕಾರದ ಉದ್ಯೋಗಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ಅಖಿಲ ಭಾರತ ಹಿಂದುಳಿದ ವರ್ಗಗಳ ರೈಲ್ವೆ ನೌಕರರ ಸಂಘ ತಿಳಿಸಿದೆ.
ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಗೋವರ್ಧನ್ ವೈ., ‘ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಮಕ್ಕಳಿಗೆ ಒಬಿಸಿ ಮತ್ತು ಒಬಿಸಿ–ಎನ್ಸಿಎಲ್ ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ನೀಡುವ ವೇಳೆ ಸಂಬಳ ಮತ್ತು ಕೃಷಿ ಆದಾಯ ಹೊರಗಿಡುವ ನಿಯಮ ಪಾಲಿಸುವಂತೆ ಕಂದಾಯ ಇಲಾಖೆ ಅಧಿಕಾರಿ ಗಳಿಗೆ ಸೂಚಿಸಬೇಕು. ಇದರಿಂದ ಕೇಂದ್ರ ಸರ್ಕಾರದ ಐಎಎಸ್, ಐಪಿಎಸ್, ಆರ್ಬಿಐ, ಐಆರ್ಎಸ್ ಸೇರಿ ಅನೇಕ ಪರೀಕ್ಷೆ ಗಳಲ್ಲಿ ಪಾಲ್ಗೊಳ್ಳಲು ಸಹಾಯವಾಗುತ್ತದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಲೋಪ ಸರಿಪಡಿಸಬೇಕು’ ಎಂದರು.
ಮಕ್ಕಳ ವಿದ್ಯಾಭ್ಯಾಸಕ್ಕೆ ಹೆತ್ತವರ ವೇತನ ಮತ್ತು ಕೃಷಿಭೂಮಿಯಿಂದ ಬರುವ ಆದಾಯವನ್ನು ಪರಿಗಣಿಸಬಾರದು. ಇತರ ಆದಾಯಗಳನ್ನಷ್ಟೇ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ಮತ್ತು ಭಾರತ ಸರ್ಕಾರ ಸ್ಪಷ್ಟಪಡಿಸಿದೆ. ಇದು ಇತರ ರಾಜ್ಯಗಳಲ್ಲಿ ಜಾರಿಯಲ್ಲಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಜಾರಿಯಾಗದೇ ಹೆತ್ತವರಿಗೆ ₹ 8 ಲಕ್ಷಕ್ಕಿಂತ ಅಧಿಕ ಆದಾಯವಿದ್ದರೆ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ ಎಂದರು. ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಸಂಘದ ಪದಾಧಿಕಾರಿಗಳಾದ ರೇವಪ್ಪ ಎಳಮೆಲಿ, ಕೆ. ಮುರುಗನ್, ಜಗದೀಶ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.