ಬೆಂಗಳೂರು: ರಾಜ್ಯದಲ್ಲಿ ಒಕ್ಕಲಿಗರ ಮೀಸಲಾತಿ ಪ್ರಮಾಣವನ್ನು ಶೇ 4ರಿಂದ ಶೇ 10ಕ್ಕೆ ಹೆಚ್ಚಿಸಲು ಶಿಫಾರಸು ಮಾಡಬೇಕು ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ, ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ.
ಸಮಿತಿಯ ಅಧ್ಯಕ್ಷ ಡಾ.ವೈ.ಕೆ. ಪುಟ್ಟಸೋಮೇಗೌಡ ಬರೆದಿರುವ ಪತ್ರವನ್ನು ಸಮಿತಿಯ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ನೇತೃತ್ವದ ನಿಯೋಗವು ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಬುಧವಾರ ಮನವಿ ಸಲ್ಲಿಸಿತು.
‘ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಒಕ್ಕಲಿಗರು ಎರಡನೇ ಸ್ಥಾನದಲ್ಲಿದ್ದಾರೆ. ಶೇ 60ರಷ್ಟು ಒಕ್ಕಲಿಗರು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ಇವರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವುದರಿಂದ ಈ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು’ ಎಂದು ಅವರು ಒತ್ತಾಯಿಸಲಾಗಿದೆ.
‘ರಾಜ್ಯದಲ್ಲಿ ಒಕ್ಕಲಿಗರಿಗೆ ಪ್ರವರ್ಗ 3ಎ ಅಡಿ ಶೇ 4ರಷ್ಟು ಮೀಸಲಾತಿ ಅವಕಾಶ ಇದ್ದರೂ, ಈ ಪ್ರವರ್ಗದಡಿಯಲ್ಲಿಯೇ ಬಲಿಜ ಹಾಗೂ ಕೊಡವ ಸಮುದಾಯದವರೂ ಇದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅವರು ಹೊಂದಿರುವ ಜನಸಂಖ್ಯೆ ಆಧಾರದ ಮೇಲೆ ಒಟ್ಟು ಶೇ 18ರಷ್ಟು ಮೀಸಲಾತಿ ನೀಡಲಾಗಿದೆ. ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿರುವ ಒಕ್ಕಲಿಗರಿಗೆ ಕೇವಲ ಶೇ 4ರಷ್ಟು ಮೀಸಲಾತಿ ನೀಡಿರುವುದು ಸಮಂಜಸ ಎನಿಸುವುದಿಲ್ಲ’ ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.