ADVERTISEMENT

ಓಲಾ ಸಿಇಒ ವಿರುದ್ಧದ ಪ್ರಕರಣ ಸಿಸಿಬಿ ತೆಕ್ಕೆಗೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 16:32 IST
Last Updated 12 ಡಿಸೆಂಬರ್ 2025, 16:32 IST
ಓಲಾ
ಓಲಾ   

ಬೆಂಗಳೂರು: ‘ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮೃತ ಉದ್ಯೋಗಿ ಕೆ.ಅರವಿಂದ್ ಸಾವಿಗೆ ಸಂಬಂಧಿಸಿದಂತೆ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭವಿಶ್‌ ಅಗರವಾಲ್‌ ವಿರುದ್ಧದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ’ ಎಂದು ರಾಜ್ಯ ಸರ್ಕಾರ, ಹೈಕೋರ್ಟ್‌ಗೆ ತಿಳಿಸಿದೆ.

‘ಅರವಿಂದ್ ಸಾವಿನ ಆರೋಪದಡಿ ನಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಮತ್ತು ಈ ಸಂಬಂಧ 30ನೇ ಎಸಿಎಂಎಂ ಕೋರ್ಟ್‌ನಲ್ಲಿ ನಡೆಯುತ್ತಿರುವ ನ್ಯಾಯಿಕ ವಿಚಾರಣೆ ರದ್ದುಗೊಳಿಸಬೇಕು’ ಎಂದು ಕೋರಿ ಕಂಪನಿಯ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಸುಬ್ರತ್ ಕುಮಾರ್ ದಾಸ್‌, ಕಂಪನಿಯ ಸಿಇಒ ಭವಿಶ್‌ ಅಗರವಾಲ್‌ ಮತ್ತು ಓಲಾ ಕಂಪನಿ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ’ ಎಂದು ನ್ಯಾಯಪೀಠಕ್ಕೆ ಅರುಹಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು 2026ರ ಜನವರಿ 21ಕ್ಕೆ ಮುಂದೂಡಿತು.

ADVERTISEMENT

ಮುಂದಿನ ವಿಚಾರಣೆಯವರೆಗೂ ಅರ್ಜಿದಾರರ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರಿಸಿದ ನ್ಯಾಯಪೀಠ, ‘ಅರ್ಜಿದಾರರು ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು’ ಎಂದು ಸೂಚಿಸಿತು.

ಪ್ರಕರಣವೇನು?

‘ನನಗೆ ಕೆಲಸದ ಸ್ಥಳದಲ್ಲಿ ಕಿರುಕುಳ ನೀಡಲಾಗುತ್ತಿದೆ, ಸಂಬಳ ಬಾಕಿ ಉಳಿಸಿಕೊಳ್ಳಲಾಗಿದೆ ಹಾಗೂ ಕಂಪನಿ ಮಾಲೀಕರು ಸವಲತ್ತುಗಳನ್ನು ನಿರಾಕರಿಸಿದ್ದಾರೆ’ ಎಂದು ಆರೋಪಿಸಿ ಕೆ.ಅರವಿಂದ್‌ ಪತ್ರವೊಂದನ್ನು ಬರೆದಿಟ್ಟು 2025ರ ಸೆಪ್ಟೆಂಬರ್ 28ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಕೆ.ಅರವಿಂದ್ ಅವರ ಸಹೋದರ ಅಶ್ವಿನ್‌ ನೀಡಿರುವ ದೂರಿನ ಮೇರೆಗೆ, ಭಾರತೀಯ ನ್ಯಾಯ ಸಂಹಿತೆ–2023ರ (ಬಿಎನ್‌ಎಸ್‌) ಕಲಂ 108 ಹಾಗೂ 3(5)ರ ಅಡಿ ಅರ್ಜಿದಾರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.