ಬೆಳಗಾವಿ: ‘ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆಯವರು ಒಪಿಡಿ (ಹೊರ ರೋಗಿಗಳ ವಿಭಾಗ) ತೆರೆದಿಡಬೇಕು. ಜನರಿಗೆ ಆರೋಗ್ಯ ಸೇವೆ ಒದಗಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೂಚಿಸಿದರು.
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ದೊರೆಯದಿದ್ದಲ್ಲಿ ಸರ್ಕಾರಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆರೋಗ್ಯ ಸಂಬಂಧಿ ಇತರ ಸಮಸ್ಯೆಗಳ ಪರಿಹಾರಕ್ಕೆ ಎಲ್ಲರೂ ಬಂದರೆ ತೊಂದರೆಯಾಗುತ್ತದೆ’ ಎಂದು ತಿಳಿಸಿದರು.
‘ಬೆಳಿಗ್ಗೆ ಹಾಗೂ ಸಂಜೆ ಒಂದಿಷ್ಟು ಸಮಯ ಕ್ಲಿನಿಕ್ಗಳನ್ನು ತೆರೆಯಬೇಕು. ಇದನ್ನು ದೇಶ ಹಾಗೂ ಸಮಾಜಸೇವೆ ಎಂದು ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ’ ಎಂದರು.
ಬಹುತೇಕ ಖಾಸಗಿ ಕ್ಲಿನಿಕ್ಗಳನ್ನು ಬಂದ್ ಮಾಡಿರುವುದರಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಕುರಿತು ‘ಪ್ರಜಾವಾಣಿ’ಯಲ್ಲಿ ಶನಿವಾರ ವರದಿ ಪ್ರಕಟವಾಗಿತ್ತು.
ನೆಹರೂ ನಗರದ ಕೆಎಲ್ಇ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೇವೆ ನೀಡಲಾಗುತ್ತಿದೆ ಎಂದು ಅಲ್ಲಿನ ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.