ಬೆಂಗಳೂರು: ‘ಆಪರೇಷನ್ ಸಿಂಧೂರ’ದಲ್ಲಿ ಭಾಗಿಯಾಗಿರುವ ಸೈನಿಕರಿಗೆ ಯಶಸ್ಸನ್ನು ಬಯಸಿ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ನಡೆಸಲಾಯಿತು.
‘ಪಹಲ್ಗಾಮ್ನಲ್ಲಿ ಭಾರತೀಯರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತಿಯಾಗಿ ನಮ್ಮ ಸೈನಿಕರು ಆಪರೇಷನ್ ಸಿಂಧೂರ ನಡೆಸುತ್ತಿದ್ದಾರೆ. ಅವರಿಗೆ ಶಕ್ತಿ ತುಂಬಬೇಕಿದೆ. ಹೀಗಾಗಿ ವಕ್ಫ್ ಅಧೀನದಲ್ಲಿರುವ ರಾಜ್ಯದ ಎಲ್ಲ ಮಸೀದಿಗಳಲ್ಲಿ ಮತ್ತು ಇತರ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಿ’ ಎಂದು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ವಕ್ಫ್ ಮಂಡಳಿಗೆ ಪತ್ರ ಬರೆದಿದ್ದರು.
ಅದರಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರ ಮಧ್ಯಾಹ್ನದ ನಮಾಜ್ ವೇಳೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಗಾಂಧಿನಗರದ ಮಸೀದಿಯಲ್ಲಿ ಪ್ರಾರ್ಥನೆಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಜಮೀರ್ ಅಹಮದ್ ಖಾನ್, ‘ದೇಶದ ಪ್ರಧಾನಿ ಅನುಮತಿ ನೀಡಿ, ಆತ್ಮಹತ್ಯಾ ಬಾಂಬ್ ಒದಗಿಸಿದರೆ ಪಾಕಿಸ್ತಾನಕ್ಕೆ ಹೋಗಿ ದಾಳಿ ನಡೆಸುತ್ತೇನೆ ಎಂಬ ಹೇಳಿಕೆಗೆ ಈಗಲೂ ಬದ್ಧವಾಗಿದ್ದೇನೆ. ನಮಗೆ ನಮ್ಮ ದೇಶ ಮುಖ್ಯ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.