ADVERTISEMENT

ಪಿಯು ಉಪನ್ಯಾಸಕರ ನೇಮಕಾತಿ; ನ. 20 ರಂದು ಆದೇಶ: ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 10:54 IST
Last Updated 17 ನವೆಂಬರ್ 2020, 10:54 IST
   

ಬೆಂಗಳೂರು: ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20 ರಿಂದ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ನವೆಂಬರ್ 20ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ADVERTISEMENT

ಕೋವಿಡ್‍ನಿಂದಾಗಿ ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗಳ ಆರ್ಥಿಕ ಮಿತವ್ಯಯ ಆದೇಶವಿದ್ದುದರಿಂದ ಹಾಗೂ ಶಾಲಾ ಕಾಲೇಜುಗಳ ಆರಂಭ ಕುರಿತು ಅನಿಶ್ಚಿತತೆ ಹಿನ್ನೆಲೆಯಲ್ಲಿ ಉಪನ್ಯಾಸಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಸಾಧ್ಯವಾಗಿರಲಿಲ್ಲ. ಈ ಮಿತವ್ಯಯ ಆದೇಶವಿದ್ದರೂ ಸಹ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೌನ್ಸೆಲಿಂಗ್ ನಡೆಸಿ ಸ್ಥಳ ನಿಯುಕ್ತಿಗೆ ಅವಕಾಶ ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

23ರಿಂದ ಪಿಯು ಉಪನ್ಯಾಸಕರ ವರ್ಗಾವಣಾ ಪ್ರಕ್ರಿಯೆ:ಪಿಯು ಉಪನ್ಯಾಸಕರ ವರ್ಗಾವಣೆಗೆ ಪ್ರಕ್ರಿಯೆ ಇದೇ 23ರಿಂದ ಆರಂಭವಾಗಲಿದ್ದು, ಅಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶವಾಗಲಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಾರಿ ಉಪನ್ಯಾಸಕರ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ. ಮುಂದಿನ ಅಧಿವೇಶನದಲ್ಲಿ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣಾ ನಿಯಂತ್ರಣ ಕಾಯ್ದೆಗೆ ಸಂಪೂರ್ಣ ತಿದ್ದುಪಡಿ ತಂದು, ಉಪನ್ಯಾಸಕ ಸ್ನೇಹಿಯಾದ ವರ್ಗಾವಣಾ ನೀತಿ ನೀತಿ ಜಾರಿಗೊಳಿಸಲಾಗುವುದೆಂದು ಸಚಿವರು ವಿವರಿಸಿದ್ದಾರೆ.

ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಪದೋನ್ನತಿ ಮತ್ತು ಸ್ಥಳ ನಿಯುಕ್ತಿ ಪ್ರಕ್ರಿಯೆಗಳು ಈಗಾಗಲೇ ಆರಂಭಗೊಂಡಿದ್ದು, ಪ್ರಕ್ರಿಯೆ ಚಾಲನೆಯಲ್ಲಿದೆ. ಹಾಗೆಯೇ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ನಾಳೆಯಿಂದ ಅಂದರೆ ನ. 18ರಿಂದ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.