ಬೆಂಗಳೂರು: ‘ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ ಹಾಗೂ ಹೂವಿನ ಹಾರ ನಿಷೇಧಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ನೇತೃತ್ವದಲ್ಲಿ ಹೂವಿನ ಬೆಳೆಗಾರರು ಮತ್ತು ಮಾರಾಟಗಾರರು ಹೆಬ್ಬಾಳದ ಬೆಂಗಳೂರು ಅಂತರರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರದ (ಐಎಫ್ಎಬಿ) ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಕೈಯಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟಿಸಿದರು.
ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ.ಅರವಿಂದ್,‘ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಸರ್ಕಾ ಆದೇಶಿಸಿರುವುದು ಖಂಡನೀಯ. ಇದು, ರಾಜ್ಯದ 7,500 ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ರೈತ ಕುಟುಂಬಗಳ ಮೇಲಿನ ಗಧಾಪ್ರಹಾರ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.
‘ಕೋವಿಡ್ ಹೊಡೆತದಿಂದಾಗಿ ಪುಷ್ಪೋದ್ಯಮ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಈ ಆದೇಶ ಮತ್ತೆ ಉದ್ಯಮವನ್ನು ಬುಡಮೇಲು ಮಾಡುವಂತಿದೆ. ಹಲವು ತಿಂಗಳಿನಿಂದ ಯಾವುದೇ ಸಭೆ ಸಮಾರಂಭಗಳ ನಡೆಯದೇ ಹೂವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.
ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಶ್ರೀಕಾಂತ್ ಬೊಲ್ಲಪಳ್ಳಿ, ‘ಪುಷ್ಪಕೃಷಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. ಹಸಿರು ಮನೆ ಮೂಲಕ ನಡೆಯುತ್ತಿರುವ ಪುಷ್ಪಕೃಷಿಯಲ್ಲಿ ಸಾವಿರಾರು ಕುಟುಂಬಗಳು ಜೀವನ ಕಂಡುಕೊಂಡಿವೆ. ಬೆಂಗಳೂರು ದೇಶದ ಪುಷ್ಪೋದ್ಯಮದ ಪ್ರಮುಖ ಹಬ್ ಆಗಿದ್ದು, ಪುಷ್ಪಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.