ADVERTISEMENT

ಕನ್ನಡ ಮಸೂದೆ: ಸುಗ್ರೀವಾಜ್ಞೆಗೆ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2023, 19:45 IST
Last Updated 1 ಜನವರಿ 2023, 19:45 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಬೆಂಗಳೂರು: ‘ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ-2022’ರ ಕುರಿತು ಚರ್ಚೆಗೆ ಅವಕಾಶ ಸಿಗಲಿಲ್ಲ. ಆದ್ದರಿಂದ ಸುಗ್ರೀವಾಜ್ಞೆಯ ಮೂಲಕ ಈ ಮಸೂದೆಯನ್ನು ಕಾನೂನು ಮಾಡಲು ಪ್ರಯತ್ನಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
ನೀಡಿದರು.

ಭಾನುವಾರ ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅವರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಸ್ವೀಕರಿಸಿ, ಮಾತನಾಡಿದರು.

‘ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ನಾಡಿನ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆದಿವೆ. ಕನ್ನಡ ಮಸೂದೆಯ ಚರ್ಚೆ ಸಾಧ್ಯವಾಗಲಿಲ್ಲ’ ಎಂದ ಅವರು, ‘ಸಾಹಿತ್ಯ ಸಮ್ಮೇಳನವು ಕನ್ನಡದ ಹಾಗೂ ಕನ್ನಡಿಗರ ಅಸ್ಮಿತೆಯ ಹಬ್ಬವಾಗಬೇಕು. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಸರ್ಕಾರ ಅವಿರತವಾಗಿ ಕೆಲಸ ಮಾಡುತ್ತಿದೆ. ನಾಡಿನ ಎಲ್ಲ ಕನ್ನಡಿಗರು ಅಕ್ಷರ ಜಾತ್ರೆಯಲ್ಲಿ ಭಾಗವಹಿಸಿ, ಸಮ್ಮೇಳನದ ರಂಗನ್ನು ಹೆಚ್ಚಿಸಬೇಕು’ ಎಂದು ಮನವಿ
ಮಾಡಿಕೊಂಡರು.

ADVERTISEMENT

ಕಸಾಪ ಅಧ್ಯಕ್ಷ ಮಹೇಶ ಜೋಶಿ, ‘ನಾಡಿನ ಸಾಹಿತಿಗಳು, ಲೇಖಕರು, ಹೋರಾಟಗಾರರು, ಸಂಘಟಕರು, ಜನಪದ ಹಾಗೂ ಸಾಂಸ್ಕೃತಿಕ ಲೋಕದ ದಿಗ್ಗಜರು, ಜನಪ್ರತಿನಿಧಿಗಳು ಹಾಗೂ ಎಲ್ಲಾ ಸಮಾಜದ ಮುಖಂಡರಿಗೆ ಪರಿಷತ್ತು ಗೌರವ ಪೂರ್ವಕವಾಗಿ ಆಹ್ವಾನ ನೀಡುತ್ತಿದೆ. ಹಾವೇರಿಯ ಸಮ್ಮೇಳನಕ್ಕೆ ಈಗಾಗಲೇ ದಿನಗಣನೆ ಆರಂಭವಾಗಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣಗೊಳ್ಳುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.