ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಖಾತೆ ಹಂಚಿಕೆ ಗೊಂದಲ ಬಗೆಹರಿದ ಬೆನ್ನಲ್ಲೇ, ವಿಶೇಷ ಕರ್ತವ್ಯಾಧಿಕಾರಿ ನೇಮಕದ ಹಗ್ಗಜಗ್ಗಾಟ ಆರಂಭವಾಗಿದೆ.
ಈ ವಿಚಾರವು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ‘ಆಪ್ತ’ರ ನಡುವೆ ಸಂಘರ್ಷಕ್ಕೆ ಹಾದಿ ಮಾಡುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.
ಪಟ್ಟು ಹಿಡಿದು ಜಲಸಂಪನ್ಮೂಲ ಖಾತೆಯನ್ನು ಪಡೆದಿರುವ ರಮೇಶ್ ಅವರು ತಮ್ಮ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿವೃತ್ತ ಮುಖ್ಯ ಎಂಜಿನಿಯರ್ ಆರ್.ರುದ್ರಪ್ಪ ಅವರನ್ನು ನೇಮಕ ಮಾಡುವಂತೆ ಬಿ.ಎಸ್.ಯಡಿಯೂರಪ್ಪ ಬಳಿ ಕೋರಿಕೊಂಡಿದ್ದರು. ರುದ್ರಯ್ಯ ಅವರನ್ನು ವಿಶೇಷ ಕರ್ತವ್ಯಾಧಿಕಾರಿಯಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಇದೇ 10ರಂದು ಟಿಪ್ಪಣಿ ನೀಡಿದ್ದರು.
‘ರುದ್ರಯ್ಯ ಅವರು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರು. ಹೀಗಾಗಿ ಅವರ ಬದಲು ನಿವೃತ್ತ ಸೂಪರಿಂಟೆಂಡಿಂಗ್ ಎಂಜಿನಿಯರ್ ಎನ್. ಕ್ಷೇತ್ರಪಾಲ್ ಅವರನ್ನು ನೇಮಕ ಮಾಡಬೇಕು’ ಎಂದು ಗುತ್ತಿಗೆದಾರರೊಬ್ಬರು ಹಾಗೂ ಇಬ್ಬರು ಮುಖ್ಯ ಎಂಜಿನಿಯರ್ಗಳು ಮುಖ್ಯಮಂತ್ರಿ ಸಚಿವಾಲಯಕ್ಕೆ ದೂರು ನೀಡಿದರು. ಕ್ಷೇತ್ರಪಾಲ್ ನೇಮಕಕ್ಕೆ ಮುಖ್ಯಮಂತ್ರಿ ಸಚಿವಾಲಯದಲ್ಲಿ
ಕಡತ ಸಿದ್ಧವಾಗಿದೆ. ಇದಕ್ಕೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದು, ರುದ್ರಯ್ಯ ಅವರನ್ನೇ ನೇಮಿಸುವಂತೆ ಪಟ್ಟು ಹಿಡಿದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.