ಬೆಂಗಳೂರು: ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಶಾಲೆಗೆ ಸೇರಿಸಲು ಇದೇ 15ರಿಂದ ‘ಮನೆ ಮನೆ ಸಮೀಕ್ಷೆ’ ನಡೆಯಲಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳು ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ರಾಜ್ಯಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಪ್ರಾಥಮಿಕ ಶಾಲೆಗೆ ಮಕ್ಕಳ ಸಾರ್ವತ್ರಿಕ ದಾಖಲಾತಿಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ರೋಗನಿರೋಧಕ ಚುಚ್ಚುಮದ್ದು ನೀಡಬೇಕು ಎಂದು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ.
ಗ್ರಾಮ ಪಂಚಾಯಿತಿಯ ಎಲ್ಲ ಶಾಲೆಗಳ ವ್ಯಾಪ್ತಿಯಲ್ಲಿ ಶಾಲೆಗೆ ಸೇರದ, ಗೈರು ಹಾಜರಾಗುತ್ತಿರುವ ಮಕ್ಕಳ ಸಮೀಕ್ಷೆಯನ್ನು ಮಾಡಲು ತಂಡವನ್ನು ರಚಿಸಬೇಕು. ಪ್ರತಿ ತಂಡದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿಗಳು ಇರಬೇಕು ಎಂದು ಹೇಳಲಾಗಿದೆ. 2021ರ ಜ.15ರೊಳಗೆ ಸಮೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಸೂಚಿಸಿದೆ.
ಹೇಗೆ ನಡೆಯಲಿದೆ ಸಮೀಕ್ಷೆ ?
* ಇ–ಆಡಳಿತ ಇಲಾಖೆ ಅಭಿವೃದ್ಧಿ ಪಡಿಸಿದ ಆ್ಯಪ್ ಮೂಲಕ ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ
* ಆ್ಯಪ್ ಬಳಕೆ ಕುರಿತಂತೆ ಪ್ರಶ್ನೆಗಳಿದ್ದಲ್ಲಿ 84484 45014 ಸಹಾಯವಾಣಿ ಸಂಪರ್ಕಿಸಬಹುದು
* ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಸಮೀಕ್ಷೆದಾರರಿಗೆ ತರಬೇತಿ ನೀಡಲಾಗುತ್ತದೆ
* ಒಂದು ಕುಟುಂಬದ ಸಮೀಕ್ಷೆಗೆ ತಂಡದ ಪ್ರತಿಯೊಬ್ಬರಿಗೆ ತಲಾ ₹5 ಭತ್ಯೆ ನಿಗದಿಪಡಿಸಲಾಗಿದೆ.
* ಪ್ರತಿ ತಂಡವು ಒಂದು ದಿನಕ್ಕೆ 50 ಕುಟುಂಬಗಳ ಸಮೀಕ್ಷೆ ಮಾಡಬೇಕು
* ಸಮೀಕ್ಷಾ ವೆಚ್ಚವನ್ನು ಆಯಾ ಗ್ರಾಮ ಪಂಚಾಯಿತಿಯೇ ಸ್ವಂತ ಸಂಪನ್ಮೂಲದಿಂದ ಭರಿಸಬೇಕು
* ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಪಂಚಾಯ್ತಿ ಇಒ ಮತ್ತು ಬಿಇಒ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಡಿಡಿಪಿಐ ಮಾರ್ಗದರ್ಶನ ಮತ್ತು ನೆರವು ನೀಡಬೇಕು ಎಂದು ಸೂಚಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.