ADVERTISEMENT

ಭುಗಿಲೆದ್ದ ಮೀನುಗಾರರ ಆಕ್ರೋಶ: ಮಲ್ಪೆಯಿಂದ ಉಡುಪಿವರೆಗೆ ಬೃಹತ್ ಪ್ರತಿಭಟನೆ

ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2019, 13:00 IST
Last Updated 6 ಜನವರಿ 2019, 13:00 IST
ಪ್ರತಿಭಟನೆ ಸಭೆಯಲ್ಲಿ ಹರಿದು ಬಂದ ಜನಸಾಗರ.
ಪ್ರತಿಭಟನೆ ಸಭೆಯಲ್ಲಿ ಹರಿದು ಬಂದ ಜನಸಾಗರ.   

ಉಡುಪಿ: 21 ದಿನಗಳಿಂದ ಮಡುಗಟ್ಟಿದ್ದ ಮೀನುಗಾರರ ಆಕ್ರೋಶ ಭಾನುವಾರ ಭುಗಿಲೆದ್ದಿತ್ತು. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮೀನುಗಾರರು ಪ್ರತಿಭಟನೆಗೆ ಧುಮುಕಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಾಪತ್ತೆಯಾಗಿರುವ ಮೀನುಗಾರರನ್ನು ಶೀಘ್ರ ಪತ್ತೆ ಮಾಡುವಂತೆ ಒತ್ತಾಯಿಸಿದರು.

ಬೆಳಿಗ್ಗೆ ಮಲ್ಪೆಯಲ್ಲಿ ತೆಂಗಿನಕಾಯಿ ಹೊಡೆದು ಪೂಜೆ ಸಲ್ಲಿಸಿಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದ ಕಡಲ ಮಕ್ಕಳು ಉಡುಪಿಯವರೆಗೂ ಸಾಗಿ ಸುಮಾರು 3 ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ಸಂಪೂರ್ಣ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಮಲ್ಪೆ ಬಂದರಿನಿಂದ ಕಲ್ಮಾಡಿ, ಆದಿ ಉಡುಪಿ, ಕರಾವಳಿ ಜಂಕ್ಷನ್‌, ಶಾರದಾ ಹೊಟೇಲ್‌ ಮಾರ್ಗವಾಗಿ ಮೇಲ್ಸೇತುವೆ ಮೇಲೆ ಸಾಗಿ ಅಂಬಲಪಾಡಿ ಜಂಕ್ಷನ್‌ ತಲುಪಿದ ಪ್ರತಿಭಟನಾಕಾರರು ಹೆದ್ದಾರಿ ತಡೆ ನಡೆಸಿದರು. ದಾರಿಯುದ್ದಕ್ಕೂ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಮೂರು ಜಿಲ್ಲೆಗಳಿಂದ 15 ಸಾವಿರಕ್ಕೂ ಹೆಚ್ಚು ಮೀನುಗಾರರು ಭಾಗವಹಿಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು.

ADVERTISEMENT

ಮಹಿಳಾ ಮೀನು ಮಾರಾಟಗಾರರ ಸಂಘ ಹಾಗೂ ಮಹಿಳಾ ಸಂಘ–ಸಂಸ್ಥೆಗಳಿಂದ ಸಾವಿರಾರು ಮಹಿಳಾ ಮೀನುಗಾರರು ಧರಣಿಯಲ್ಲಿ ಭಾಗವಹಿಸಿದ್ದಾರೆ. ‘ಮೀನುಗಾರರ ಜೀವಕ್ಕೆ ಬೆಲೆ ಇಲ್ಲವೇ?’ ‘ದೇಶ, ರಾಜ್ಯವನ್ನು ಆಳುವವರೇ ಮೀನುಗಾರರ ಸಂಕಷ್ಟ ಅರಿಯಿರಿ’, ನಾವು ಸಾಲ ಮನ್ನಾ ಮಾಡಿ, ಉದ್ಯೋಗ ನೀಡಿ ಎಂದು ಬೀದಿಗೆ ಇಳಿದಿಲ್ಲ. ನಮ್ಮವರನ್ನು ಕಳೆದುಕೊಂಡು 21 ದಿನಗಳು ಕಳೆದಿವೆ. ಅವರನ್ನು ಹುಡುಕಿಕೊಡಿ ಎಂದು ಕೇಳುತ್ತಿದ್ದೇವೆ’ ಎಂದು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಮಲ್ಪೆ, ಮಂಗಳೂರು, ಗಂಗೊಳ್ಳಿ, ಹೊನ್ನಾವರ, ಕಾರವಾರದ ಮೀನುಗಾರಿಕಾ ಬಂದರು ಚಟುವಟಿಕೆ ಸಂಪೂರ್ಣ ಬಂದ್ ಮಾಡಲಾಗಿತ್ತು. ನಗರದೊಳಗಿನ ಮೀನು ಮಾರುಕಟ್ಟೆಗಳೂ ಬಂದ್‌ ಆಗಿತ್ತು. ನಿರೀಕ್ಷೆಗೂ ಮೀರಿ ಪ್ರತಿಭಟನೆಯಲ್ಲಿ ಭಾಗುವಹಿಸುವ ಮೂಲಕ ಮೀನುಗಾರ ಶಕ್ತಿ ಹಾಗೂ ಒಗ್ಗಟ್ಟು ಪ್ರದರ್ಶಿಸಿದರು.

ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಸಿ. ಕುಂದರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಯಶ್‌ಪಾಲ ಸುವರ್ಣ, ಶಾಸಕ ರಘುಪತಿ ಭಟ್‌, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಸಂಸದೆ ಶೋಭಾ ಕರದ್ಲಾಂಜೆ, ಶಾಸಕ ಲಾಲಾಜಿ ಮೆಂಡನ್‌ ಧರಣಿ ನೇತೃತ್ವವನ್ನು ವಹಿಸಿದರು.

ಭದ್ರತೆ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿವೈಎಸ್ಪಿ ಟಿ. ಆರ್. ಜೈಶಂಕರ್, ದಿನೇಶ್ ಕುಮಾರ್ ಸ್ಥಳದಲ್ಲಿ ಹಾಜರಿದ್ದು ಭದ್ರತೆ ನೋಡಿಕೊಂಡರು. 3 ಕೆ.ಎಸ್‌.ಆರ್‌.ಪಿ ತಂಡ, 1 ವಜ್ರವಾಹಕ, ಡಿ.ಆರ್‌ 6 ಸೇರಿದಂತೆ ಒಟ್ಟು 400 ಮಂದಿ ಪೊಲೀಸ್‌ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದರು.

ರಸ್ತೆ ಸಂಚಾರದಲ್ಲಿ ಬದಲಾವಣೆ

ಮೆರವಣಿಗೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಬಲಪಾಡಿಯಿಂದ ಕಿನ್ನಿಮೂಲ್ಕಿಯವರೆಗೆ ಆರು ಕಿ.ಮೀ. ರಸ್ತೆ ಸಂಚಾರವನ್ನು ಪೊಲೀಸರು ಸ್ಥಗಿತಗೊಳಿಸಿದರು. ಕುಂದಾಪುರದಿಂದ ಮಂಗಳೂರಿಗೆ ಹೋಗುವ ಪ್ರಯಾಣಿಕರಿಗೆ ಅಂಬಾಗಿಲು, ಪೆರಂಪಳ್ಳಿ, ಮಣಿಪಾಲ ಮಾರ್ಗವಾಗಿ ಬೀಡಿನಗುಡ್ಡೆ ಹಾಗೂ ಮಂಗಳೂರಿನಿಂದ ಕುಂದಾಪುರಕ್ಕೆ ಹೋಗುವ ವಾಹನಗಳನ್ನು ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಮೂಲಕ, ಬಲೈಪಾದೆ, ಕಲ್ಸಂಕ, ಮೂಲಕ ತೆರಳಲು ವ್ಯವಸ್ಥೆ ಮಾಡಲಾಗಿತ್ತು.
ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

ಮೀನುಗಾರರು ಸುರಕ್ಷಿತವಾಗಿ ವಾಪಸಾಗಲಿ ಎನ್ನುವ ನಿಟ್ಟಿನಲ್ಲಿ ಆದಿ ಉಡುಪಿ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರತಿಭಟನೆ ಸಾಗುವ ದಾರಿಯುದ್ದಕ್ಕೂ ಪ್ರತಿಭಟನಾಕಾರರಿಗೆ ತಂಪು ಪಾನೀಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.