
ಬೆಂಗಳೂರು: ವಿವಿಧ ಇಲಾಖೆಗಳಲ್ಲಿರುವ ಹೊರ ಗುತ್ತಿಗೆ ವ್ಯವಸ್ಥೆಯನ್ನು ತೆಗೆದುಹಾಕಲು ಮತ್ತು ಪರ್ಯಾಯ ವ್ಯವಸ್ಥೆಗೆ ಕಾನೂನು ರೂಪಿಸಬಹುದೇ ಎಂಬ ಕುರಿತು ವಿವರವಾದ ವರದಿ ನೀಡುವಂತೆ ಕಾನೂನು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಕಾನೂನು ಸಚಿವ ಎಚ್.ಕೆ. ಪಾಟೀಲ ನಿರ್ದೇಶನ ನೀಡಿದ್ದಾರೆ.
ರಾಜ್ಯದಾದ್ಯಂತ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ಧೇಶ ಸಹಕಾರ ಸಂಘ ಸ್ಥಾಪಿಸುವ ಕುರಿತು ಪರಾಮರ್ಶಿಸಿ, ಸೂಕ್ತ ಶಿಫಾರಸು ಮಾಡಲು ರಚಿಸಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದಾರೆ.
ಆರೋಗ್ಯ, ಗಣಿ, ಇಂಧನ, ನಗರಾಭಿವೃದ್ಧಿ ಸೇರಿದಂತೆ ಕೆಲವು ಇಲಾಖೆಗಳಲ್ಲಿ ಅಪಾಯಕಾರಿ ಕೆಲಸಗಳಿಗೆ ಹೊರ ಗುತ್ತಿಗೆಯಡಿ ಸಾವಿರಾರು ನೌಕರರು ನೇಮಕಗೊಂಡಿದ್ದಾರೆ. ಈ ಸಿಬ್ಬಂದಿಯನ್ನು ಒಳಗುತ್ತಿಗೆ ಅಥವಾ ಕಾಯಮಾತಿಗೊಳಿಸುವ ಮೂಲಕ ಉದ್ಯೋಗ ಭದ್ರತೆ ಒದಗಿಸಲು ಏನೇನು ಕ್ರಮ ತೆಗೆದುಕೊಳ್ಳಬಹುದೆಂಬ ಬಗ್ಗೆಯೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆಗಸ್ಟ್ 19ರಂದು ಪ್ರಕರಣವೊಂದರಲ್ಲಿ ನೀಡಿದ್ದ ತೀರ್ಪಿನಲ್ಲಿ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ಕುರಿತಂತೆ ಕೆಲವು ಅಂಶಗಳನ್ನು ಗಂಭೀರವಾಗಿ ಉಲ್ಲೇಖಿಸಿದೆ. ಈ ಅಂಶಗಳನ್ನು ಗಣನೆಗೆ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದೂ ಅವರು ತಿಳಿಸಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.