ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ 1984ನೇ ಬ್ಯಾಚ್ನ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.
ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಗುರುವಾರ ವಯೋನಿವೃತ್ತಿ ಹೊಂದುತ್ತಿದ್ದಾರೆ. ಈ ಹುದ್ದೆಗೆ ರವಿಕುಮಾರ್ ಅವರನ್ನು ನೇಮಕ ಮಾಡಿದ್ದು, ಅವರ ಸೇವಾವಧಿ ಇನ್ನೂ ಒಂದು ವರ್ಷ ಐದು ತಿಂಗಳು ಇದೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್, ವಂದಿತಾ ಶರ್ಮ, ಐ.ಎಸ್.ಎನ್. ಪ್ರಸಾದ್ ಹೆಸರು ಮುಖ್ಯ ಕಾರ್ಯದರ್ಶಿ ಆಯ್ಕೆಯ ಮುಂಚೂಣಿಯಲ್ಲಿದ್ದವು. ಹಿರಿಯ ಐಎಎಸ್ ಅಧಿಕಾರಿಗಳಾದ ಪ್ರದೀಪ್ ಸಿಂಗ್ ಖರೋಲ, ಮಹೇಂದ್ರ ಜೈನ್, ರಜನೀಶ್ ಗೋಯಲ್ ಅವರ ಹೆಸರುಗಳೂ ಪರಿಶೀಲನೆಯಲ್ಲಿದ್ದವು. ನೂತನ ಮುಖ್ಯ ಕಾರ್ಯದರ್ಶಿ ಆಯ್ಕೆಯ ಅಧಿಕಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಡುವ ತೀರ್ಮಾನವನ್ನು ಸೋಮವಾರ ನಡೆದ ಸಂಪುಟ ಸಭೆ ಕೈಗೊಂಡಿತ್ತು.
ಆಂಧ್ರಪ್ರದೇಶದವರಾದ ರವಿಕುಮಾರ್ ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತ, ವಾಣಿಜ್ಯ ತೆರಿಗೆ, ಸಹಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಇಂಧನ, ಸಾರಿಗೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.