ADVERTISEMENT

2 ಎ ಮೀಸಲಾತಿಗಾಗಿ ರಾಜಧಾನಿಯಲ್ಲಿ ಮತ್ತೆ ಹೋರಾಟ ಆರಂಭಿಸಿದ ಜಯ ಮೃತ್ಯುಂಜಯ ಸ್ವಾಮಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2023, 15:45 IST
Last Updated 14 ಜನವರಿ 2023, 15:45 IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು 
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು    

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ, ರಾಜಧಾನಿಯಲ್ಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಶನಿವಾರದಿಂದ ಮತ್ತೊಂದು ಸುತ್ತಿನ ಹೋರಾಟ ಆರಂಭವಾಗಿದೆ.

ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದ ಪ್ರತಿಭಟನಕಾರರು ಅಲ್ಲಿಂದ ಶನಿವಾರ ಬೆಂಗಳೂರಿಗೆ ಬಂದರು. ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

‘ಮುಖ್ಯಮಂತ್ರಿ ಕ್ಷೇತ್ರದಲ್ಲಿಯೇ ಪಂಚಮಸಾಲಿ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿದ್ದೇವೆ. ಅಂತಿಮ ಆದೇಶ ಬರುವ ತನಕ ಸ್ವಾತಂತ್ರ್ಯ ಉದ್ಯಾನ ಬಿಟ್ಟು ಎಲ್ಲಿಗೂ ಕದಲುವುದಿಲ್ಲ’ ಎಂದು ಸ್ವಾಮೀಜಿ ಘೋಷಿಸಿದರು.

ADVERTISEMENT

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲಿದ್ದ ನಂಬಿಕೆ ಈಗ ಉಳಿದಿಲ್ಲ. 2ಎ ಮೀಸಲು ಕೊಡುತ್ತೇನೆ ಎಂದು ಮುಖ್ಯಮಂತ್ರಿ ಆಣೆ ಮಾಡಿಯೂ ಮೋಸ ಮಾಡಿದ್ದಾರೆ. ರಾಜಧಾನಿಯಲ್ಲಿ ಈ ಹಿಂದೆಯೇ 10 ಲಕ್ಷ ಜನರನ್ನು ಸೇರಿಸಿ ಪಾದಯಾತ್ರೆ ನಡೆಸಲಾಗಿತ್ತು. ಆಗಲೇ ಸರ್ಕಾರದ ಮನಸ್ಸು ಕರಗಬೇಕಿತ್ತು’ ಎಂದು ಹೇಳಿದರು.

‘ಪೀಠವನ್ನು ಬಿಟ್ಟು ನಿರಂತರವಾಗಿ ಹೋರಾಟ ನಡೆಸುತ್ತಿದ್ದೇನೆ. ಸುದೀರ್ಘವಾದ ಹೋರಾಟ ಯಾರೂ ನಡೆಸಿಲ್ಲ. ಇದು ಕಣ್ಣಿಲ್ಲದ ರಾಜ್ಯ ಸರ್ಕಾರ’ ಎಂದು ದೂರಿದರು.

‘ಬಿಜೆಪಿ ನೇತೃತ್ವದ ಸರ್ಕಾರ ಪಂಚಮಸಾಲಿ ಸಮುದಾಯವನ್ನು ಮತಕ್ಕಾಗಿ ಮಾತ್ರ ಬಳಸಿಕೊಳ್ಳುತ್ತಿದೆ. ಸಮುದಾಯದ ಪರವಾಗಿ ಕೆಲಸ ಮಾಡುತ್ತಿಲ್ಲ. ಸಮುದಾಯದ ಜನರು ಅಧಿಕಾರ, ಹಣ ಕೇಳುತ್ತಿಲ್ಲ. ಮೀಸಲಾತಿ ಮಾತ್ರ ಕೇಳುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ 2ಎ ಮೀಸಲಾತಿ ಕಲ್ಪಿಸುತ್ತೇವೆಂದು ಈ ಸರ್ಕಾರವೇ ಸಮುದಾಯಕ್ಕೆ ಭರವಸೆ ನೀಡಿತ್ತು. ಅದರಂತೆ ನಡೆದುಕೊಳ್ಳಬೇಕು. ಕೊಟ್ಟ ಮಾತು ತಪ್ಪುವುದು ಬೇಡ’ ಎಂದು ಸ್ವಾಮೀಜಿ ಆಗ್ರಹಿಸಿದರು.

‘ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರೂ ಸಮುದಾಯದ ಕೈಹಿಡಿಯಲಿಲ್ಲ. ನೀವೂ (ಬಸವರಾಜ ಬೊಮ್ಮಾಯಿ) ಮುಖ್ಯಮಂತ್ರಿಯಾಗಿ 18 ತಿಂಗಳು ಕಳೆದಿದೆ. ಪದೇ ಪದೇ ಸುಳ್ಳು ಹೇಳಿಕೊಂಡು ಸಮುದಾಯದ ಮುಖಂಡರ ದಾರಿ ತಪ್ಪಿಸುತ್ತಿದ್ದೀರಿ. ಬೆಳಗಾವಿಗೆ ಪ್ರತಿಭಟನೆಗೆ ತೆರಳಿದ್ದಾಗಲೂ ಸುಳ್ಳು ಹೇಳಿ ದಾರಿ ತಪ್ಪಿಸಲಾಯಿತು’ ಎಂದು ಆಕ್ರೋಶ ಹೊರಹಾಕಿದರು.

‘ಸಾಕಷ್ಟು ಗಡುವುಗಳು ಮುಕ್ತಾಯವಾಗಿವೆ. ಅಂತಿಮ ಆದೇಶದ ಬರುವ ತನಕ ಏಕಾಂಗಿ ಹೋರಾಟ ನಡೆಸುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.